ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ: ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ
ಚಿಕ್ಕಬಳ್ಳಾಪುರ, ಮಾರ್ಚ್ 25: ಪ್ರಧಾನಮಂತ್ರಿ ನರೇಂದ್ರ ಮೋದಿ ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ಎಂ ನಾಗರಾಜ್ ಗುರುವಾರ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು, ಎಸ್ಪಿಜಿ ಅಧಿಕಾರಿಗಳು ಹಾಗೂ ಪ್ರಧಾನಿಗಳ ಭದ್ರತಾ ಸಿಬ್ಬಂದಿ ಈಗಾಗಲೇ ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ತಂಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಪಿಡಬ್ಲ್ಯೂಡಿ ಅಧಿಕಾರಿಗಳ ಕೊರಿಕೆ ಮೇರೆಗೆ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಭೇಟಿಗೆ ನಿರ್ಬಂಧ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 25ರಂದು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ಆಗಮಿಸಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ. ಇದಕ್ಕಾಗಿ ಪೂರ್ವಸಿದ್ದತೆಗಳು ಭರದಿಂದ ಸಾಗಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವುದರ ಮೂಲಕ ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ, ಸತ್ಯ ಸಾಯಿ ಗ್ರಾಮದ ಸತ್ಯ ಸಾಯಿ ಸರಳಾ ಆಸ್ಪತ್ರೆಗೆ ಇದೆ ತಿಂಗಳ 25ರಂದು ಬೆಳಿಗ್ಗೆ 10.40ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯರು ಭೇಟಿ ನೀಡಲಿದ್ದಾರೆ.
ಆಸ್ಪತ್ರೆಯ ಎದುರುಗಡೆ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಬೆಳಗ್ಗೆ 10.40ಕ್ಕೆ ನೇರವಾಗಿ ಹೆಲಿಕಾಪ್ಟರ್ ಮೂಲಕ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಗೆ ಆಗಮಿಸಲಿರುವ ಮೋದಿ, ಕಾಲೇಜು ಉದ್ಘಾಟನೆ ನಂತರ 12 ಗಂಟೆಗೆ ಹೆಲಿಕಾಪ್ಟರ್ ಮೂಲಕ ವಾಪಸಾಗಲಿದ್ದಾರೆ.
ಮಾರ್ಚ್ 25ರಂದು ಮೋದಿ ಅವರು ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಕೆಆರ್ಪುರಂ, ವೈಟ್ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಸಂಚಾರಕ್ಕೆ ಚಾಲನೆ ನೀಡಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮೋದಿ ಕಾರ್ಯಕ್ರಮಗಳ ಸಂಪೂರ್ಣ ವಿವರ
ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಗಣ್ಯರು ಸ್ವಾಗತಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಗೆ ತೆರಳಲಿದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ಅಲ್ಲಿರುವ ವಸ್ತು ಸಂಗ್ರಹಾಲಯಕ್ಕೂ ಭೇಟಿ ನೀಡಲಿದ್ದಾರೆ. ನಂತರ ಶ್ರೀಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಸಂಶೋಧನಾ ಕೇಂದ್ರ ಉದ್ಘಾಟಿಸಿ ನಂತರ ಮಧ್ಯಾಹ್ನ 1ಕ್ಕೆ ಬೆಂಗಳೂರಿನ ವೈಟ್ಫೀಲ್ಡ್ಗೆ ವಾಪಸ್ ಹಿಂತಿರುಗಲಿದ್ದಾರೆ.

ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ದಾವಣಗೆರೆಗೆ ಭೇಟಿ ನೀಡಲಿದ್ದು, ಪ್ರಧಾನಿಗಳ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಣ್ಣೆನಗರಿ ತುಂಬೆಲ್ಲಾ ಬಿಜೆಪಿ ಫ್ಲೆಕ್ಸ್, ಬಾವುಟ, ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ನಗರವು ಕೇಸರಿಮಯವಾಗಿದೆ. ನಗರದ ಜಿಎಂಐಟಿ ಸಮೀಪದ 400 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಪೆಂಡಾಲ್ ಹಾಕಲಾಗಿದೆ. 2 ಲಕ್ಷ ಖುರ್ಚಿಗಳನ್ನು ಹಾಕಲಾಗಿದ್ದು, 10 ಲಕ್ಷಕ್ಕೂ ಹೆಚ್ಚಿನ ಜನರು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ನಿರೀಕ್ಷೆ ಇದೆ.












Click it and Unblock the Notifications