ಮೈಸೂರು ದಸರಾ ಮಾದರಿಯಲ್ಲೇ ನಂದಿ ಗಿರಿಧಾಮದಲ್ಲಿ ಶಿವೋತ್ಸವ
ಚಿಕ್ಕಬಳ್ಳಾಪುರ, ಫೆಬ್ರವರಿ 26: ಮೈಸೂರು ದಸರಾ ರೀತಿಯಲ್ಲೇ ನಂದಿ ಗಿರಿಧಾಮದ ಭೋಗ ನಂದೀಶ್ವರ ದೇವಾಲಯದಲ್ಲಿ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ ಎಂದರು. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳಿವೆ. ನಂದಿ ಬೆಟ್ಟದ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ ಎಂದರು.
ಮಹಾಶಿವರಾತ್ರಿ ದಿನ ನಂದಿ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದು ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು.
ರಾಜ್ಯಪಾಲರಿಂದ ನಂದಿ ಶಿವೋತ್ಸವಕ್ಕೆ ಚಾಲನೆ:
ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಶಿವೋತ್ಸವಕ್ಕೆ ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದೆ. ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಮಧುಸೂದನ್ ಗುರುಗಳು ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದರು.
ಸಾಂಸ್ಕೃತಿಕ ಮನರಂಜನೆ ಜೊತೆ ಅನ್ನ ಸಂತರ್ಪಣೆ:
ಮಾರ್ಚ್ 1ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಇದರಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿದ್ದು, ನಗೆ ಹಬ್ಬ ಕೂಡ ಇರಲಿದೆ. ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ದೀಪಾಲಂಕಾರ:
ನಂದಿ ಬೆಟ್ಟದಲ್ಲಿ ದೀಪಾಲಂಕಾರ ಮಾಡಲಾಗುತ್ತಿದ್ದು, ಬೆಟ್ಟದಲ್ಲಿ ಲೇಸರ್ ಶೋ ಇರಲಿದೆ. ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. 20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಕಾರು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ ತೆರೆಯಲಿದ್ದು, 24 ಗಂಟೆ ಕಾರ್ಯನಿರ್ವಹಿಸಲಿದೆ. ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ. ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದು ವಿವರಿಸಿದರು.
ಕಾಂಗ್ರೆಸ್ ರಾಜಕೀಯ:
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು. ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು. ಆದರೆ 7 ವರ್ಷ ಕಾಲಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಭಯ ಬೇಡ:
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ. ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು. ಸರ್ಕಾರದ ಮಾರ್ಗಸೂಚಿಯಂತೆ ಮುಂದುವರೆಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications