ಚಿಕ್ಕಬಳ್ಳಾಪುರದಲ್ಲಿ ಎರಡು ವೈದ್ಯಕೀಯ ಕಾಲೇಜು: ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ನ. 24: ಮುಂದಿನ ವರ್ಷದೊಳಗೆ ಜಿಲ್ಲೆಯಲ್ಲಿ ಎರಡು ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ಬುಧವಾರ ಗೌರಿಬಿದನೂರು ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಿಲ್ಲೆಯ "ಸರ್ಕಾರಿ ವೈದ್ಯಕೀಯ ಕಾಲೇಜು" ನಿರ್ಮಾಣ ಹಂತದಲ್ಲಿರುವ ನೂತನ ಕಟ್ಟಡ ಮುಂದಿನ ಮೂರು ತಿಂಗಳಲ್ಲಿ ಆರಂಭವಾಗಲಿದೆ. ಜೊತೆಗೆ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಸರಳ ಮೆಡಿಕಲ್ ಕಾಲೇಜು ಸಹ 2023 ರ ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಅಧಿಕ ಶುಲ್ಕ ವಿಧಿಸದಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ತಾಕೀತು ಮಾಡಬೇಕು: ಹೈಕೋರ್ಟ್
ಆರೋಗ್ಯವಂತ ಸಮಾಜವನ್ನು ಮಾತ್ರ ಸಂಪತ್ಭರಿತ ಸಮಾಜ ಎಂದು ಕರೆಯಬಹುದು. ಅದಕ್ಕಾಗಿ ನಮ್ಮ ಸರ್ಕಾರ ಮುಂದಿನ ಡಿಸೆಂಬರ್ ಒಳಗೆ ನೂತನವಾಗಿ 438 "ನಮ್ಮ ಕ್ಲಿನಿಕ್" ಗಳನ್ನು ತೆರೆಯುತ್ತಿದೆ. ಈಗಾಗಲೇ ರಾಜ್ಯದಲ್ಲಿ 1,080 ಜನೌಷಧಿ ಕೇಂದ್ರಗಳನ್ನು ತೆರೆಯುವ ಮೂಲಕ ಅತೀ ಹೆಚ್ಚು ಕೇಂದ್ರಗಳನ್ನು ತೆರೆದು ದೇಶದಲ್ಲಿಯೇ ಎರಡನೇ ಸ್ಥಾನಗಳಿಸಿದೆ, ಶೇಕಡಾ 80 ರಷ್ಟು ರಿಯಾಯಿತಿ ದರದಲ್ಲಿ ಜನರಿಗೆ ಔಷಧಿಗಳನ್ನು ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
6 ತಿಂಗಳು ಅಂತರದಲ್ಲಿ 1500 ವೈದ್ಯರ ನೇಮಕ
"ಕೇವಲ 6 ತಿಂಗಳು ಅಂತರದಲ್ಲಿ 1,500 ವೈದ್ಯರನ್ನು ನೇಮಕ ಮಾಡಲಾಗಿದೆ. ಜೊತೆಗೆ ಹೊರಗುತ್ತಿಗೆ ಆಧಾರದಲ್ಲಿ 2,800 ವೈದ್ಯರು, 1,200 ತಜ್ಞ ವೈದ್ಯರು ಸೇರಿದಂತೆ ಒಟ್ಟು 4 ಸಾವಿರ ವೈದ್ಯರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಪ್ರತಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಆಮ್ಲಜನಕ ಸಹಿತ ಹಾಸಿಗೆಗಳನ್ನಾಗಿಸಿ ಅರೋಗ್ಯ ಸೇವೆ ನೀಡಲಾಗುತ್ತಿದೆ .ಆಸ್ಪತ್ರೆಗಳಲ್ಲಿ ಉನ್ನತ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ ವೈದ್ಯಕೀಯ ಯಂತ್ರೋಪಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗಿದೆ" ಎಂದಿದ್ದಾರೆ.
ಆಯುಷ್ಮಾನ್ ಕಾಡ್ನಿಂದ 5 ಲಕ್ಷದ ವರಗೆ ಉಚಿತ ಚಿಕಿತ್ಸೆ
"ಸುಸಜ್ಜಿತ ಉನ್ನತ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿ ಮೊತ್ತದ ಉಚಿತ ಆರೋಗ್ಯ ಸೇವಾ ಸೌಲಭ್ಯವನ್ನು ಒದಗಿಸುವ 1.20 ಕೋಟಿ ಕಾರ್ಡ್ ಗಳನ್ನು ವಿತರಣೆಗೆ ಸಿದ್ದಪಡಿಸಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ದಿನಾಂಕ ಪಡೆದು ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಉಚಿತವಾಗಿ ವಿತರಣೆ ಮಾಡುವ ಕಾರ್ಯ ನಡೆಯಲಿದೆ" ಎಂದರು.
ಸುಮಾರು 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ನಾಗರಾಜ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಅಮೃತ ಯೋಜನೆಯಡಿ 8 ಸಾವಿರ ಕೋಟಿ ಅನುದಾನವನ್ನು ನೀಡಲಾಗುತ್ತಿದೆ. ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ನೀಡಲು ಯೋಜಿಸಲಾಗಿದೆ. ದೇಶದ ಸಮಸ್ತ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಗೌರಿಬಿದನೂರು ನಗರಸಭೆ ವ್ಯಾಪ್ತಿಯಲ್ಲಿ 2022-2023ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನದಡಿ ಸುಮಾರು 2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ .
ಗೌರಿಬಿದನೂರಿನಲ್ಲಿ 27 ಕೋಟಿ ವೆಚ್ಚದಲ್ಲಿ ಸಾರ್ವಜನಿಕ ಆಸ್ಪತ್ರೆಯ ಕಟ್ಟಡ
ಗೌರಿಬಿದನೂರು ನಗರದಲ್ಲಿ ಒಂದು ರಕ್ತ ನಿಧಿ ಕೇಂದ್ರ ತೆರೆಯಲು, ನಾಮಗೊಂಡ್ಲು ಗ್ರಾಮದಲ್ಲಿ ಮಾದರಿ ಆರೋಗ್ಯ ಕೇಂದ್ರ ತೆರೆಯಲು, ಆಯುಷ್ಮಾನ್ ಯೋಜನೆಯ ಕುರಿತು ಸರ್ಕಾರಿ ಆಸ್ಪತ್ರೆಗಳಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಲು ತಿಳಿಸಿದ್ದಾರೆ. ಜೊತೆಗೆ ಗೌರಿಬಿದನೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಚಿವರುಗಳಲ್ಲಿ ಮನವಿ ಮಾಡಿದ್ದಾರೆ.
ಬುಧವರಾ ಗೌರಿಬಿದನೂರು ನಗರದಲ್ಲಿ 27 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಾರ್ವಜನಿಕ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಮಾಡಲಾಗಿದೆ. ಕಾದಲವೇಣಿ ಗ್ರಾಮದಲ್ಲಿ ಹಾಗೂ ಹಿರೇಬಿದನೂರಿನಲ್ಲಿ 1.10 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.