ಚಿಕ್ಕಬಳ್ಳಾಪುರಕ್ಕೆ ಇಎಸ್ಐ ಆಸ್ಪತ್ರೆ; ಕೇಂದ್ರದ ಒಪ್ಪಿಗೆ

ಚಿಕ್ಕಬಳ್ಳಾಪುರ, ಮೇ 20: ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಲ್ಲಿಸಿದ ಮನವಿಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.

ನವದೆಹಲಿಯ ಕಾರ್ಮಿಕ ಸಚಿವಾಲಯದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ಸಿಂಗ್‌ ಯಾದವ್‌, ಚಿಕ್ಕಬಳ್ಳಾಪುರ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡುವ ಪ್ರಕ್ರಿಯೆಗೆ ತಕ್ಷಣವೇ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉನ್ನತ ಮಟ್ಟದ ಸಭೆಗೂ ಮುನ್ನ ಸಚಿವ ಯಾದವ್‌ ಅವರನ್ನು ಭೇಟಿ ಮಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಸ್ಪತ್ರೆ ಆರಂಭಿಸುವಂತೆ ಮನವಿ ಸಲ್ಲಿಸಿದರು.

ಚಿಕ್ಕಬಳ್ಳಾಪುರದಲ್ಲಿ ಅತಿಹೆಚ್ಚು ಕಾರ್ಮಿಕರ ಸಂಖ್ಯೆ

ಚಿಕ್ಕಬಳ್ಳಾಪುರದಲ್ಲಿ ಅತಿಹೆಚ್ಚು ಕಾರ್ಮಿಕರ ಸಂಖ್ಯೆ

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂತೆ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಇಎಸ್‌ಐ ಆಸ್ಪತ್ರೆ ಅಗತ್ಯವಿದೆ. ಈ ಹಿನ್ನೆಲೆ ತಕ್ಷಣವೇ ಆಸ್ಪತ್ರೆಗೆ ಮಂಜೂರಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸಚಿವ ಸುಧಾಕರ್ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಯಾದವ್‌ ಕೂಡಲೇ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದೇನು?

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದೇನು?

ಹಿರಿಯ ಅಧಿಕಾರಿಗಳ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ, ಜಿಲ್ಲಾ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಹೊಸ ತಾಯಿ-ಮಗುವಿನ ಆಸ್ಪತ್ರೆ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ. ಮೂರು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ. ಇಷ್ಟಾದರೂ ದೊಡ್ಡ ಸಂಖ್ಯೆಯಲ್ಲಿ ಇರುವ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರು ಮತ್ತು ಅವಲಂಬಿತರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಸಿಗುತ್ತಿಲ್ಲ. ಸದ್ಯ ಇರುವ ವ್ಯವಸ್ಥೆಗಳ ಮೇಲೆ ಹೆಚ್ಚಿನ ಒತ್ತಡವಿದೆ. ಹೀಗಾಗಿ ಜಿಲ್ಲೆಗೆ ಇಎಸ್ಐ ಆಸ್ಪತ್ರೆ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಇಎಸ್ಐ ಆಸ್ಪತ್ರೆಗಾಗಿ ಬೆಂಗಳೂರಿಗೆ ಹೋಗಬೇಕು

ಇಎಸ್ಐ ಆಸ್ಪತ್ರೆಗಾಗಿ ಬೆಂಗಳೂರಿಗೆ ಹೋಗಬೇಕು

ಜಿಲ್ಲೆಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಕಾರ್ಮಿಕರು ಪ್ರತಿನಿತ್ಯ ಸಂಚರಿಸುತ್ತಾರೆ. ಜತೆಗೆ ದೊಡ್ಡ ಸಂಖ್ಯೆಯ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲೆಯಲ್ಲಿ ದುಡಿಯುತ್ತಿದ್ದಾರೆ. ಹಾಗೆ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರ ಕೈಗಾರಿಕೆಗಳಿವೆ. ಹೊಸದಾಗಿ ಅನೇಕ ಕೈಗಾರಿಕೆಗಳು ತಲೆ ಎತ್ತುತ್ತಿವೆ. ಇಂತಹ ಸ್ಥಿತಿಯಲ್ಲಿ ಕಾರ್ಮಿಕರು ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳ ಸದಸ್ಯರು ಬೆಂಗಳೂರಿಗೆ ತೆರಳಿ ಇಎಸ್‌ಐ ಆಸ್ಪತ್ರೆ ಸೌಲಭ್ಯ ಪಡೆಯುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದರು.

ಅಕ್ಕ-ಪಕ್ಕದ ಜಿಲ್ಲೆಗಳಿಗೂ ಅನುಕೂಲ

ಅಕ್ಕ-ಪಕ್ಕದ ಜಿಲ್ಲೆಗಳಿಗೂ ಅನುಕೂಲ

ಚಿಕ್ಕಬಳ್ಳಾಪುರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುವುದರಿಂದ ಕೇವಲ ಚಿಕ್ಕಬಳ್ಳಾಪುರ ಮಾತ್ರವಲ್ಲ. ನೆರೆಯ ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾರ್ಮಿಕರಲ್ಲದೆ, ನೆರೆಯ ಆಂಧ್ರದ ಗಡಿ ಭಾಗದ ಜಿಲ್ಲೆಗಳ ಕಾರ್ಮಿಕರಿಗೂ ಸಮರ್ಪಕ ವೈದ್ಯಕೀಯ ಸೌಲಭ್ಯ ದೊರಕಲಿದೆ. ಪ್ರತಿಜಿಲ್ಲೆಗೂ ಇಎಸ್‌ಐ ಆಸ್ಪತ್ರೆ ಆರಂಭಿಸಬೇಕು ಎಂಬುದು ರಾಜ್ಯ ಸರ್ಕಾರದ ಚಿಂತನೆ ಆಗಿದ್ದು, ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ.

ಒಟ್ಟು 69 ಆಸ್ಪತ್ರೆಗಳ ಆರಂಭಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಪೈಕಿ 19ಕ್ಕೆ ಮಾತ್ರ ಅನುಮತಿ ಸಿಕ್ಕಿದೆ, ಉಳಿದ ಪ್ರಸ್ತಾವನೆಗಳಿಗೂ ಅನುಮತಿ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಆಗ್ರಹಿಸಿದರು.

ಆರೋಗ್ಯ ಸಚಿವ ಸುಧಾಕರ್ ಮನವಿಗೆ ಸಭೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಯಾದವ್‌, ರಾಜ್ಯದ ಪ್ರಸ್ತಾವನೆಯನ್ನು ಪರಿಗಣಿಸಲಾಗಿದೆ. ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು. ಚಿಕ್ಕಬಳ್ಳಾಪುರಕ್ಕೆ ಇಎಸ್‌ಐ ಆಸ್ಪತ್ರೆಯ ಅಗತ್ಯತೆ ತಮಗೂ ಮನವರಿಕೆ ಆಗಿದ್ದು, ತಕ್ಷಣವೇ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+