ಕಾಂಗ್ರೆಸ್ ಬೆದರಿಕೆಗಳಿಗೆ ಅಂಜುವುದಿಲ್ಲ; ಡಾ. ಕೆ. ಸುಧಾಕರ್
ಚಿಕ್ಕಬಳ್ಳಾಪುರ, ಏಪ್ರಿಲ್ 13; "ಗುತ್ತಿಗೆದಾರ ಸಂತೋಷ್ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ. ಎಸ್. ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಆರೋಪಿಸಿದರು.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವರು, "ಕಾಂಗ್ರೆಸ್ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ದಾಳವಾಗಿ ಬಳಕೆ ಮಾಡಲಾಗುತ್ತಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗುತ್ತದೆ. ಕಪ್ಪುಪಟ್ಟಿಗೆ ಅವರನ್ನು ಸೇರ್ಪಡೆ ಮಾಡಲು ಸಿಎಂಗೆ ಮನವಿ" ಮಾಡಲಾಗುತ್ತದೆ ಎಂದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ: ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆ
"ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ. ಗುತ್ತಿಗೆದಾರ ಮೃತರಾಗಿರುವುದಕ್ಕೆ ದುಃಖವಿದೆ. ಆದರೆ ಈ ಸಾವು ಏಕೆ ಸಂಭವಿಸಿದೆ? ಎಂಬುದು ತನಿಖೆ ಆಗದೆಯೇ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಕೂಡ ಬೇಕಿಲ್ಲ" ಎಂದು ತಿಳಿಸಿದರು.
Breaking: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ
"ಕಾಂಗ್ರೆಸ್ನವರು ಎಷ್ಟು ಸತ್ಯ ಹರಿಶ್ಚಂದ್ರರು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ನವರು ಯಾವ ಇಲಾಖೆಯಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಅಂಕಿ ಅಂಶಗಳನ್ನು ನಾವು ಕೂಡ ಕೊಡಬಹುದು" ಎಂದು ಸಚಿವರು ತಿರುಗೇಟು ನೀಡಿದರು.
ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯ ಹೈಲೈಟ್ಸ್!
ಕಾಂಗ್ರೆಸ್ ವಿರುದ್ಧ ಸಚಿವರ ಆಕ್ರೋಶ
"ಓರ್ವ ವ್ಯಕ್ತಿ ಬರೆದ ಅನಾಮಧೇಯ ಪತ್ರ ಅಥವಾ ಆಧಾರ ರಹಿತ ದೂರಿಗೆ ಮಾನ್ಯತೆ ನೀಡಲು ಸಾಧ್ಯವಿಲ್ಲ. ದಾಖಲೆಗಳೇ ಇಲ್ಲದೆ ಒಬ್ಬರನ್ನು ಗೇಲಿ ಮಾಡುವುದು ಅಥವಾ ಆರೋಪ ಮಾಡುವುದು ಸರಿಯಲ್ಲ. ನಮ್ಮ ಸರ್ಕಾರ ಬಹಳ ಪಾರದರ್ಶಕವಾಗಿ ನಡೆದುಕೊಳ್ಳುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಿತಾಮಹರೇ ಕಾಂಗ್ರೆಸ್ಸಿಗರು. ಭ್ರಷ್ಟಾಚಾರದ ಜನಕರೇ ಕಾಂಗ್ರೆಸ್ನವರು" ಎಂದು ಸುಧಾಕರ್ ಆರೋಪಿಸಿದರು.
ಜನಪ್ರತಿನಿಧಿ ಹೇಗೆ ಕೆಲಸ ಮಾಡಬೇಕು?
"ಪ್ರಧಾನಿ ನರೇಂದ್ರ ಮೋದಿಯವರು ಪಾರದರ್ಶಕತೆ, ಭ್ರಷ್ಟಾಚಾರ ರಹಿತ ಸರ್ಕಾರವನ್ನು ನೀಡಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿ ಹೇಗೆ ಕೆಲಸ ಮಾಡಬೇಕೆಂದು ಅವರು ತೋರಿಸಿಕೊಟ್ಟಿದ್ದಾರೆ. ಭ್ರಷ್ಟಾಚಾರ ಇಲ್ಲ ಎಂದು ಕೂಡ ನಾನು ಹೇಳುತ್ತಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಭ್ರಷ್ಟಾಚಾರ ಹುಟ್ಟಿರುವುದಲ್ಲ. ಇದರ ನಿರ್ಮೂಲನೆಗೆ ಎಲ್ಲ ಪಕ್ಷಗಳು ಸೇರಿ ಚರ್ಚೆ ಮಾಡಬೇಕಿದೆ. ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಹಾಗೂ ನಿರ್ಮೂಲನೆ ಮಾಡುವುದೇ ಈಗಿನ ಸವಾಲು" ಎಂದು ಸಚಿವರು ವಿವರಿಸಿದರು.
ತನಿಖಾ ವರದಿ ಬರಲಿ
"ಕಾಂಗ್ರೆಸ್ನವರು ಏನು ಮಾಡುತ್ತಾರೆ? ಎಂಬುದು ಈಗ ಮುಖ್ಯವಲ್ಲ. ತನಿಖೆ ನಂತರ ಸತ್ಯ ತಿಳಿದುಬರಲಿದೆ ಹಾಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಹಿಂದೆ ನಡೆದ ಡಿವೈಎಸ್ಪಿ ಗಣಪತಿ ಪ್ರಕರಣವೇ ಬೇರೆ, ಈಗಿನ ವಿಚಾರವೇ ಬೇರೆ. ವಾಟ್ಸಾಪ್ನಲ್ಲಿ ಬಂದ ಸಂದೇಶ ಅವರಿಂದಲೇ ಬಂದಿದೆಯೇ ಎಂಬುದು ಯಾರಿಗೂ ಗೊತ್ತಿಲ್ಲ. ತನಿಖೆ ನಡೆಯುತ್ತಿರುವುದರಿಂದ ಕಾದು ನೋಡಬೇಕಿದೆ. ಸಾರ್ವಜನಿಕ ಬದುಕಿನಲ್ಲಿರುವ ಸಚಿವ ಕೆ. ಎಸ್. ಈಶ್ವರಪ್ಪರನ್ನು ಉದ್ದೇಶಪೂರ್ವಕವಾಗಿ ಇದರಲ್ಲಿ ಸಿಲುಕಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ" ಎಂದು ಆರೋಪಿಸಿದರು.
ಮಾನನಷ್ಟ ಮೊಕದ್ದಮೆ
"ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದ್ದರಿಂದ ಅವರು ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕಾಗುತ್ತದೆ. ಆಧಾರ ರಹಿತವಾಗಿ ಅವರು ಆರೋಪ ಮಾಡಿದ್ದು, ಅವರ ವಿರುದ್ಧ ಕ್ರಮ ವಹಿಸಬೇಕು ಹಾಗೂ ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ. ಜೊತೆಗೆ ಅವರ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಇಂತಹವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದ್ದು, ಅವರೆಲ್ಲರಿಗೂ ನಾಚಿಕೆಯಾಗಬೇಕು. ಎಲ್ಲ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ಇದು ಕಾಂಗ್ರೆಸ್ನವರಿಗೂ ಅನ್ವಯವಾಗುವುದಿಲ್ಲವೇ?" ಎಂದು ಪ್ರಶ್ನೆ ಮಾಡಿದರು.
Recommended Video
ತನಿಖೆಗೆ ಸಿಎಂಗೆ ಮನವಿ
"ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿ ಸಚಿವರು ಮಾಡಿದ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡಿಸಬೇಕಿದೆ. ಚಾರ್ಜ್ ಶೀಟ್ ಕೂಡ ದಾಖಲಿಸಬೇಕಿದೆ. ಈ ಘಟನೆಯಿಂದ ರಾಜ್ಯ ಹಾಗೂ ಸರ್ಕಾರದ ಗೌರವ ಹಾಳಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಲಾಗುವುದು" ಎಂದರು.
"ಚುನಾವಣೆ ಸಮಯದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಈ ರೀತಿ ಆರೋಪಗಳನ್ನು ಮಾಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಗುತ್ತಿಗೆದಾರರು ಆಧಾರ ರಹಿತವಾಗಿಯೇ ಎಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇವರೆಲ್ಲರೂ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ" ಎಂದು ದೂರಿದರು.