ಚಿಕ್ಕಮಗಳೂರು; 15 ವಿದ್ಯಾರ್ಥಿ, 12 ಶಿಕ್ಷಕರಿಗೆ ಕೋವಿಡ್ ಸೋಂಕು
ಚಿಕ್ಕಮಗಳೂರು, ಜನವರಿ 06: "ಜಿಲ್ಲೆಯಲ್ಲಿ 15 ವಿದ್ಯಾರ್ಥಿಗಳು, 12 ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ" ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಅವರು, "ಇಂದು 11 ವಿಧ್ಯಾರ್ಥಿಗಳು ಹಾಗೂ 7 ಶಿಕ್ಷಕರಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದೆ" ಎಂದರು.
ಕೋವಿಡ್ ಸೋಂಕು ಪತ್ತೆಯಾಗಿರುವ ಶಿಕ್ಷಕರು ಹಾಗೂ ಮಕ್ಕಳಿಗೆ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಬರುತ್ತಿದೆಯೋ ಅಥವ ವಿದ್ಯಾರ್ಥಿಗಳಿಂದಲೇ ವಿದ್ಯಾರ್ಥಿಗಳಿಗೆ ಬರುತ್ತಿದೆಯೋ ಗೊತ್ತಾಗಿಲ್ಲ.

"ಶಾಲೆಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ನಮಗೂ-ನಿಮಗೂ ಕೋವಿಡ್ ಬರುತ್ತದೆ. ಮುಂಜಾಗೃತಾ ಕ್ರಮ ಕೈಗೊಂಡಿದ್ದರೆ ಬರುವ ಸಾಧ್ಯತೆ ಕಡಿಮೆ ಎಂದಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
"ಕೋವಿಡ್ ಬಂದಿರುವ ವ್ಯಕ್ತಿಗಳ ಕುಟುಂಬದವರು, ಅಕ್ಕಪಕ್ಕದವರು, ಅವರು ಪ್ರತಿದಿನ ಸಂಪರ್ಕಕ್ಕೆ ಒಳಪಡುವ ಜನರ ಮೇಲೂ ನಿಗಾ ವಹಿಸಲಾಗಿದೆ. ಬಹುತೇಕ ಜನರು ರೋಗ ಲಕ್ಷಣಗಳನ್ನು ಹೊಂದಿಲ್ಲ. ಇಂತಹ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ತುಂಬಾ ಕಡಿಮೆ" ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತೆ 11 ವಿದ್ಯಾರ್ಥಿಗಳಿಗೆ, 7 ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದೆ. ಇದುವರೆಗೂ ಒಟ್ಟು 12 ಶಿಕ್ಷಕರು, 15 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿಕೆ ನೀಡಿದ್ದಾರೆ.#Coronavirus #Chikkamagaluru pic.twitter.com/ekEbguErpi
— oneindiakannada (@OneindiaKannada) January 6, 2021
ಚಿಕ್ಕಮಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಉಮೇಶ್ ಮಾತನಾಡಿ, "ಶೀಘ್ರದಲ್ಲಿ ಕೋವಿಡ್ಗೆ ಲಸಿಕೆ ಬರುತ್ತದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಲಸಿಕೆ ಸಂಗ್ರಹಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ 103 ಕೇಂದ್ರಗಳಲ್ಲಿ ಲಸಿಕೆ ಸಂಗ್ರಹಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದರು.
"ಮೊದಲ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಒಟ್ಟು 9,852 ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ" ಎಂದು ಹೇಳಿದರು.












Click it and Unblock the Notifications