Breaking: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಲ್ಲಿ 150ಎಂಬಿಬಿಎಸ್ ಸೀಟು ಆರಂಭ
ಚಿಕ್ಕಮಗಳೂರು ಆಗಸ್ಟ್ 04: ಪ್ರಸಕ್ತ 2022-23ನೇ ಶೈಕ್ಷಣಿಕ ಸಾಲಿನಿಂದಲೇ ಚಿಕ್ಕಮಗಳೂರಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನೂತನ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ಸಿಕ್ಕಿದೆ ಎಂದು ಆರೋಗ್ಯ ಮತ್ತು ವೈಧ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿ ಸಂತಸ ಹಂಚಿಕೊಂಡಿರುವ ಅವರು, ಒಂದು ವಾರದ ಹಿಂದಷ್ಟೇ ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ) ಹಾವೇರಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ ಆರಂಭವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಪ್ರವೇಶಾತಿ ಆರಂಭಕ್ಕೆ ಅನುಮತಿ ನೀಡಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಇದೇ ಶೈಕ್ಷಣಿಕ (2022-23ನೇ) 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ನೀಡಿದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ) ಈ ನಿರ್ಧಾರದಿಂದ ಗ್ರಾಮೀಣಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕಲಿಯಲು ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದವಾರವಷ್ಟೇ ಹಾವೇರಿ ಮತ್ತು ಯಾದಗಿರಿಯ ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಆರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಇಂದು ಚಿಕ್ಕಮಗಳೂರಿನ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ನೀಡಿದೆ.
— Dr Sudhakar K (@mla_sudhakar) August 4, 2022
1/3 pic.twitter.com/TPWrZ8fLwA
3ವರ್ಷದಲ್ಲಿ 4ವೈದ್ಯಕೀಯ ಕಾಲೇಜು
"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವನಾಗಿ ನಾನು ಪ್ರಮಾಣ ವಚನ ಸ್ವೀಕರಿಸಿ ಒಂದು ವರ್ಷ ಪೂರೈಸಿದ ದಿನವೇ ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಈ ಅನುಮತಿ ನಿರ್ಧಾರ ಪ್ರಕಟವಾಗಿರುವುದು ವೈಯಕ್ತಿವಾಗಿ ಸಂತಸ ತಂದಿದೆ. ವೈದ್ಯಕೀಯ ಶಿಕ್ಷಣ ಸಚಿವನಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ನಾಲ್ಕು ವೈದ್ಯಕೀಯ ಕಾಲೇಜು ಮತ್ತು 700 ಹೆಚ್ಚುವರಿ ಎಂಬಿಬಿಎಸ್ ಸೀಟು ಕಲ್ಪಿಸಿರುವುದು ಹೆಮ್ಮೆ ಹಾಗೂ ತೃಪ್ತಿ ಮೂಡಿಸದೆ," ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಕರ್ನಾಟಕದ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಆರೋಗ್ಯ ಖಾತೆ ಸಚಿವನಾಗಿ ನನ್ನ ಎಲ್ಲ ಪ್ರಯತ್ನಗಳಿಗೆ ಸಹಕರಿಸಿ ಬೆಂಬಲ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಧಾಕರ್ ಈ ವೇಳೆ ಅಭಿನಂದನೆ ತಿಳಿಸಿದ್ದಾರೆ.