ಚಿಕ್ಕಮಗಳೂರಲ್ಲಿ 4 ಕೋವಿಡ್ ಕೇಸ್ ಪತ್ತೆ; ಭಯಪಡುವ ಅಗತ್ಯವಿಲ್ಲ
ಚಿಕ್ಕಮಗಳೂರು, ಡಿಸೆಂಬರ್ 21: ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೂ ಜನರು ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ನಾಲ್ಕು ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಶೀತ, ಕೆಮ್ಮು, ನೆಗಡಿ, ಜ್ವರ, ಬಂದರೆ ಪರೀಕ್ಷೆ ಮಾಡಿಸಿಕೊಳ್ಳಿ. 60 ವರ್ಷ ಮೇಲ್ಪಟ್ಟರು ಪ್ರತಿನಿತ್ಯ ಮಾಸ್ಕ್ ಧರಿಸಿ. ಮುಂಜಾಗ್ರತಾ ಕ್ರಮ ಅನುಸರಿಸಿ ಎಂದು ಮನವಿ ಮಾಡಲಾಗಿದೆ.

ಈ ಕೋವಿಡ್ ಅಲೆ ಎದುರಿಸಲು ಜಿಲ್ಲಾ ಆಸ್ಪತ್ರೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಶೇಷ ಘಟಕ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ಜಿಲ್ಲಾ ಆಸ್ಪತ್ರೆಯಲ್ಲಿ ಇದೆ. ಈಗಾಗಲೇ ಆರ್ಟಿಪಿಸಿಆರ್ ಟೆಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಜಿಲ್ಲಾ ಸರ್ಜನ್ ಡಾ. ಸಿ. ಮೋಹನ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಕೋವಿಡ್ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ. ಪಾಸಿಟಿವ್ ಬಂದವರಿಗೆ ಹೋಂ ಐಸೋಲೇಶನ್ ವ್ಯವಸ್ಥೆ ಮಾಡಲಾಗಿದೆ. ಪಾಸಿಟಿವ್ ಬಂದ ವರದಿಗಳ ಮಾದರಿಗಳನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದ್ದು, JN1 ರೂಪಾಂತರಿ ಕೋವಿಡ್ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಅವಶ್ಯಕತೆಗೆ ತಕ್ಕಷ್ಟು ಬೆಡ್ ವ್ಯವಸ್ಥೆ ಮಾಡಲಾಗಿದೆ. ಜ್ವರ, ಶೀತ, ಕೆಮ್ಮು ಇರುವರು ಬಂದು ಟೆಸ್ಟ್ ಮಾಡಿಸಲು ಜಿಲ್ಲಾ ಸರ್ಜನ್ ಡಾ. ಸಿ. ಮೋಹನ್ ಕುಮಾರ್ ಮನವಿ ಮಾಡಿದ್ದಾರೆ.
ಟೆಸ್ಟ್ಗೆ ಆಗಮಿಸಿದ ಜನರು; ಬುಧವಾರ ಚಿಕ್ಕಮಗಳೂರಿನಲ್ಲಿ 4 ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಮುಂದುವರೆಸಲಾಗಿದೆ. ಬುಧದವಾರ 51 ಜನರು 51 ಜನರ ಮಾದರಿ ಪರೀಕ್ಷಿಸಲಾಗಿತ್ತು. ಇವರಲ್ಲಿ ನಾಲ್ವರಿಗೆ ಸೋಂಕು ಧೃಢಪಟ್ಟಿತ್ತು.
ಜನರಲ್ಲಿ ಕೋವಿಡ್ ಆತಂಕ ಹೆಚ್ಚಾದ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಮಾಸ್ಕ್ ಧರಿಸುತ್ತಿದ್ದಾರೆ ಮತ್ತು ಸೋಂಕಿನ ಲಕ್ಷಣ ಇರುವವರು ಜಿಲ್ಲಾಸ್ಪತ್ರೆಗೆ ಕೋವಿಡ್ ಪರೀಕ್ಷೆಗಾಗಿ ಆಗಮಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಗೃಹ ಕಛೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, "ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ತಮ್ಮ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಉತ್ತಮ. ಆಮ್ಲಜನಕ, ವೆಂಟಿಲೇಟರ್, ಬೆಡ್ಗಳ ಕೊರತೆಯಾಗದಂತೆ ಆಸ್ಪತ್ರೆಗಳಿಗೆ ಸರ್ವಸನ್ನದ್ಧವಾಗಿರಲು ಸೂಚನೆ ನೀಡಲಾಗಿದೆ. ಕೊರೊನಾ ಸಾಂಕ್ರಾಮಿಕವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಕೋವಿಡ್ - 19 ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ" ಎಂದರು.
ತಾಂತ್ರಿಕ ಸಲಹಾ ಸಮಿತಿಯು 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು ಉತ್ತಮ ಎಂದು ಸಲಹೆ ನೀಡಿದೆ.
ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್ ಧರಿಸುವುದು. ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ ಎಂದು ಹೇಳಿದೆ.
ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಉತ್ತಮ. ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು. ಕೇರಳ ಮತ್ತು ತಮಿಳು ನಾಡು ಗಡಿ ಭಾಗದ ಜಿಲ್ಲೆಗಳಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರ (ILI)ದ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, 'ನಾವು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಗಣಿಸುತ್ತೇವೆ. ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ" ಎಂದರು.












Click it and Unblock the Notifications