ಓವರ್ ಡೋಸ್ ಇಂಜಕ್ಷನ್ಗೆ 7 ವರ್ಷದ ಬಾಲಕ ಸಾವು: ವೈದ್ಯ ಎಸ್ಕೇಪ್!
ಚಿಕ್ಕಮಗಳೂರು ಸೆಪ್ಟೆಂಬರ್ 28: ಓವರ್ ಡೋಸ್ ಇಂಜಕ್ಷನ್ಗೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವೈದ್ಯರ ದಡ್ಡತನಕ್ಕೆ ಪುಟ್ಟ ಬಾಲಕ ಬಲಿಯಾಗಿದ್ದಾನೆ. ಇದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ವೈದ್ಯನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ 7 ವರ್ಷದ ಸೋನೇಶ್ ಮೃತ ದುರ್ದೈವಿ. 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸೋನೇಶ್ನನ್ನು ಪೋಷಕರು ಹತ್ತಿರದ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಸೋನೇಶ್ನನ್ನು ವೈದ್ಯ ವರುಣ್ ಎಂಬಾತ ಪರೀಕ್ಷಿಸಿದ್ದನು. ಬಳಿಕ ಬಾಲಕನಿಗೆ ವೈದ್ಯ ಇಂಜಕ್ಷನ್ ನೀಡಿದ್ದಾನೆ. ಇದರಿಂದಾಗಿ ಬಾಲಕ ಮೃತಪಟ್ಟಿದ್ದಾನೆ.

ಬಾಲಕನಿಗೆ ಇಂಜಕ್ಷನ್ ನೀಡಿದ್ದ ಜಾಗದಲ್ಲಿ ಬೊಬ್ಬೆ ಬಂದು, ಪಸ್ ಕಾಣಿಸಿಕೊಂಡಿದೆ. ಇದರಿಂದಾಗಿ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ವೈದ್ಯ ವರುಣ್ ವಿರುದ್ಧ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ವೈದ್ಯ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಕೋಲಾರದ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ
ಕೋಲಾರ ನಗರ ಹೊರ ವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾರಾಮಾರಿ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಕೆಲವರಿಗೆ ಸಭೆಗೆ ಆಹ್ವಾನ ಇಲ್ಲ ಎಂಬ ಕಾರಣಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಉಸ್ತುವಾರಿ ಎಂ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕೆಲ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಆರಂಭವಾದ ಗಲಾಟೆಯಲ್ಲಿ ಕಾಂಗ್ರೆಸ್ ಶಾಸಕರ ಎದುರೇ ಪರಸ್ಪರ ತಳ್ಳಾಟ ನೂಕಾಟ ನಡೆದಿದೆ. ಗಲಾಟೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನೇ ವೇದಿಕೆಯಿಂದ ಹೊರ ನೂಕಿದ್ದಾರೆ. ಪರಸ್ಪರ ಗುಂಪುಗಳ ಮಧ್ಯೆ ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ.
ಗುಂಪುಗಳ ನಡುವೆ ಗಲಾಟೆ ನಡೆಯುತ್ತಿದ್ದರು ಶಾಸಕರು ಸುಮ್ಮನಾಗಿರುವುದು ಕಂಡು ಬಂದಿದೆ. ಸಭೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ನಜೀರ್ ಅಹ್ಮದ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದವರಿಗೂ ಮಣೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.












Click it and Unblock the Notifications