ದತ್ತಪೀಠಕ್ಕೆ ಅರ್ಚಕರ ನೇಮಕ: ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ಆದೇಶ
ಚಿಕ್ಕಮಗಳೂರು, ಅಕ್ಟೋಬರ್ 5: ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್ಗಿರಿಯಲ್ಲಿರುವ ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತು ಹೈಕೋರ್ಟ್ನಿಂದ ತೀರ್ಪು ಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ವಿಧಾನಸೌಧದಲ್ಲಿ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ಸಭೆಯಲ್ಲಿ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಸಿ.ಟಿ. ರವಿ, ವಿಧಾನ ಪರಿಷತ್ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಅರ್ಚಕರ ನೇಮಕ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸರ್ಕಾರವು ಮುಂದೆ ಏನು ಮಾಡಬೇಕು ಎಂಬ ಕುರಿತು ಹಾಗೂ ಕ್ರಮಗಳ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಮುಜಾವರ್ ನೇಮಕ ರದ್ದುಪಡಿಸಿದ್ದ ಸರ್ಕಾರ
ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್ಗಿರಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜೆಗೆ ಹಿಂದಿನ ಸರ್ಕಾರ ನೇಮಿಸಿದ್ದ ಮುಜಾವರ್ಗಳ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್, ಪೂಜಾ ವಿಧಾನದ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಸೆ.28ರಂದು ಆದೇಶಿಸಿತ್ತು.
2018ರಲ್ಲಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದ್ದ ನೇಮಕಾತಿ ನಿರ್ಧಾರವನ್ನು ರದ್ದುಪಡಿಸಿದ್ದ ಹೈಕೋರ್ಟ್, ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿತ್ತು. ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ಈ ಸಂಬಂಧ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿತ್ತು.
ಬಾಬಾಬುಡನ್ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹಿಂದೂ ಮತ್ತು ಮುಸ್ಲಿಮ್ ಸಮುದಾಯದ ಭಕ್ತರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಹಿಂದೂಗಳನ್ನೇ ಪೂಜಾರಿಗಳನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಹಿಂದಿನಿಂದ ಒತ್ತಾಯಿಸುತ್ತಿತ್ತು. ಪೀಠವನ್ನು ಮುಜರಾಯಿ ಇಲಾಖೆಯೇ ನಿರ್ವಹಿಸುತ್ತಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ಸಹ ಮುಜರಾಯಿ ಆಯುಕ್ತರಿಗೆ ಪೂಜಾರಿ ನೇಮಕದ ಅಧಿಕಾರ ನೀಡಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದ ನಂತರ ಈ ವಿಚಾರ ನಿರ್ಧರಿಸುವುದಾಗಿ ತಿಳಿಸಿತ್ತು. ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಪೂಜಾರಿಗಳ ನೇಮಕಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪ ಮಾಡಿತ್ತು.
ಹಿಂದೂ ಅರ್ಚಕರನ್ನು ಶೀಘ್ರ ನೇಮಕಕ್ಕೆ ಸಿಎಂಗೆ ಮನವಿ
ನ್ಯಾಯಾಲಯದ ತೀರ್ಪಿನಂತೆ ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ಹಿಂದೂ ಅರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಮತ್ತು ದತ್ತ ಜಯಂತಿಗೆ ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಭಜರಂಗ ದಳ ಮನವಿ ಮಾಡಿತು.
ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು ಹಾಗೂ ಡಿಸೆಂಬರ್ 18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಯಿತು.
ತಾವು ಕೂಡಾ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಭಜರಂಗ ದಳದ ರಾಜ್ಯ ಸಂಚಾಲಕ ಕೆ.ಆರ್. ಸುನಿಲ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ರಘು ಸಕಲೇಶಪುರ, ಮುರಳಿ ಕೃಷ್ಣ ಹಸಂತಡ್ಕ ಜೊತೆಗಿದ್ದರು.












Click it and Unblock the Notifications