ಕಾಂಗ್ರೆಸ್ನಿಂದ ಪ್ರತೀ ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆ: ಮಧು ಬಂಗಾರಪ್ಪ
ಚಿಕ್ಕಮಗಳೂರು, ನವೆಂಬರ್ 4 : ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರತ್ಯೇಕ ಪ್ರಣಾಳಿಕೆಯನ್ನು ತಯಾರಿಸಲಿದೆ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಸದಸ್ಯ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಪ್ರಣಾಳಿಕಾ ಸಮಿತಿ ಅಧ್ಯಕ್ಷರಾದ ಪರಮೇಶ್ವರ್ ಪ್ರತಿ ಜಿಲ್ಲೆಗಳಿಗೂ ಭೇಟಿ ನೀಡಿ ಆಯಾ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಜಿಲ್ಲಾವಾರು ಮಾಹಿತಿ ಪಡೆದು ಜಿಲ್ಲಾವಾರು ಪ್ರಣಾಳಿಕೆಯನ್ನು ತಯಾರಿಸಲಿದ್ದಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಹಿಂದುಳಿದ ವರ್ಗದ ವಿಭಾಗದ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಿಂದುಳಿದ ವರ್ಗಕ್ಕೆ ಸೇರಿರುವ ಅತ್ಯಂತ ಚಿಕ್ಕಪುಟ್ಟ ಸಮುದಾಯಗಳನ್ನೂ ಗುರುತಿಸಿ ಆ ಸಮುದಾಯಗಳಿಗೂ ಪಕ್ಷದಲ್ಲಿ ಪ್ರಾತಿನಿಧ್ಯವನ್ನು ನೀಡಬೇಕು. ಇದು ಬಂಗಾರಪ್ಪರ ಮಗನಾಗಿ ಮತ್ತು ಕಾಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ನನ್ನ ಜವಾಬ್ದಾರಿ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಚಿಕ್ಕ ಪುಟ್ಟ ಸಮುದಾಯದವರಿಗೂ ಸೂಕ್ತ ಸ್ಥಾನಮಾನ ದೊರಕಿಸಿಕೊಡಬೇಕೆಂಬ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶಗಳನ್ನು ನಡೆಸಲಾಗುವುದು. ಚುನಾವಣೆ ಹತ್ತಿರ ಬಂದಿರುವುದರಿಂದ ಪಕ್ಷದ ರಾಜ್ಯ ಮತ್ತು ಸ್ಥಳೀಯ ಮುಖಂಡರುಗಳನ್ನು ಸೇರಿಸಿಕೊಂಡು ಸುಮಾರು 30 ಸಾವಿರ ಜನರ ಸಮಾವೇಶ ಸಂಘಟಿಸಬೇಕೆಂಬ ಗುರಿ ಇದೆ ಎಂದರು.
ಎಲ್ಲಾ ಜಿಲ್ಲೆಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ಹಿಂದುಳಿದವರ್ಗದ ವಿಭಾಗದಿಂದ ಕೊಡಬೇಕು. ಪಾರಂಪರಿಕವಾಗಿ ಹಿಂದುಳಿದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಶಕ್ತಿ ನೀಡುತ್ತಾ ಬಂದಿದ್ದಾರೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಮನವಿ ಮಾಡಿದರು.
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇರಳದಲ್ಲಿ ಕಾನೂನನ್ನು ಸ್ವಲ್ಪ ಸಡಿಲಮಾಡಿಕೊಂಡು ಅಲ್ಲಿನ ಸರ್ಕಾರ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಿಕ್ಕಮಗಳೂರು, ಕಾರವಾರ, ಹಾಸನ, ಶಿವಮೊಗ್ಗ ಸೇರಿದಂತೆ ವಿವಿಧೆಡೆಯ ಪ್ರದೇಶಗಳನ್ನು ಬಾಧಿಸುವ ಕಸ್ತೂರಿ ರಂಗನ್ ವರದಿ ಬಗ್ಗೆ ದೆಹಲಿಯಲ್ಲಿ ಧ್ವನಿ ಎತ್ತಬೇಕಾದ ಸಂಸದರುಗಳು ತಮ್ಮ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಅರಣ್ಯ ಪ್ರದೇಶಗಳ ಒತ್ತುವರಿಗೆ ಸಂಬಂಧಿಸಿದ ಸಮಸ್ಯೆಗಳು ಇತ್ಯರ್ಥ ಮಾಡಿಕೊಳ್ಳದಿದ್ದರೆ ನೂರಾರು ವರ್ಷಗಳಾದರೂ ಇದು ಸಮಸ್ಯೆಯಾಗಿಯೇ ಉಳಿದುಕೊಳ್ಳುತ್ತದೆ. ಅರಣ್ಯ ಒತ್ತುವರಿ ಸಮಸ್ಯೆಗೆ ಸಂಬಂಧಿಸಿದಂತೆ ಹೆಚ್ಚು ಹಿಂದುಳಿದ ವರ್ಗದ ಜನರೇ ಸಾಗುವಳಿ ಮಾಡುತ್ತಿದ್ದಾರೆ. ಇವರುಗಳನ್ನು ಭೂಗಳ್ಳರು ಎಂದು ಬಿಂಬಿಸಲಾಗಿದೆ. ಶಿವಮೊಗ್ಗದಲ್ಲಿ ಇವರುಗಳಿಗೆ ನೋಟೀಸ್ ನೀಡಲಾಗುತ್ತಿದೆ. ನ್ಯಾಯಾಲಯದಿಂದ ಜಾಮೀನು ಪಡೆಯಬೇಕಾದ ಪರಿಸ್ಥಿತಿಗೆ ತಂದಿಟ್ಟಿರುವ ಸರ್ಕಾರ ಇಡೀ ಊರುಗಳನ್ನೇ ಖಾಲಿ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈ ಎಲ್ಲಾ ಕಾರಣಗಳಿಂದ ಹಿಂದುಳಿದ ವರ್ಗದ ವಿಭಾಗದವರನ್ನು ಹೆಚ್ಚು ಸಂಘಟಿಸ ಬೇಕೆಂದರು. ಸಂಪೂರ್ಣವಾಗಿ ಹಿಂದುಳಿದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರೆ, ಪಕ್ಷ ಸುಮಾರು 125 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಇವತ್ತಿನ ವಾಸ್ತವಾಂಶ ನೋಡಿದರೆ, ಕಾಂಗ್ರೆಸ್ ಪಕ್ಷ ನಿಡುತ್ತಾ ಬಂದಿದ್ದ ಆರ್ಥಿಕ ಸಂಕಷ್ಟದಲ್ಲಿರುವರ ಪರವಾದ ಕಾರ್ಯಕ್ರಮಗಳ ಬಗ್ಗೆ ಜನರು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದರು.












Click it and Unblock the Notifications