ಯತ್ನಾಳ ಸಿಡಿ ಹೇಳಿಕೆ; ಯಾವ ಸಿಡಿನೂ ಇಲ್ಲ ಅಂದ್ರು ನಾಯಕರು!
ಚಿಕ್ಕಮಗಳೂರು, ಜನವರಿ 13: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗಿದೆ. 7 ಶಾಸಕರು ಸಂಪುಟಕ್ಕೆ ಸೇರಿದ್ದು, ಅಬಕಾರಿ ಸಚಿವ ಹೆಚ್. ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಸಂಪುಟ ವಿಸ್ತರಣೆ ವೇಳೆ ಅವಕಾಶ ಸಿಗದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಲ್ಲೂ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದೆ.
"ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ" ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿವಿಧ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಕೆ. ಎಸ್. ಈಶ್ವರಪ್ಪ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದು, "ಸಿಡಿನೂ ಇಲ್ಲ, ಪಾಡಿನೂ ಇಲ್ಲ..ಸುಮ್ನೆ ಹೇಳುತ್ತಾರೆ ಅಷ್ಟೇ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ" ಎಂದರು.
"ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಬಂದ ಅರ್ಹತೆ ಇದ್ದವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮುನಿರತ್ನ, ಹೆಚ್. ವಿಶ್ವನಾಥ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಏನೋ ಪದವನ್ನು ಬಳಸಬಹುದು. ಆದರೆ, ಇದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದಲ್ಲ. ಎಲ್ಲಾ ಶಾಸಕರು ಕಲ್ಲುಬಂಡೆಯಂತೆ ಪಕ್ಷದಲ್ಲಿ ಇದ್ದಾರೆ. ಸರ್ಕಾರ ಬಿಲ್ ಕುಲ್ ಪತನವಾಗಲ್ಲ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿಕ್ರಿಯೆ ನೀಡಲು ನಕಾರ; ಬಸನಗೌಟ ಪಾಟೀಲ್ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ನಿರಾಕರಿಸಿದರು. "ಈ ಬಗ್ಗೆ ನಾನೇನು ಪ್ರತಿಕ್ರಿಯಿಸಲಾರೆ. ಯೋಗ ಇರುವವರಿಗೆ ಸಚಿವ ಸ್ಥಾನ ಸಿಕ್ಕಿದೆ. ಯೋಗ್ಯತೆ ಇರೋರು ಬಹಳಷ್ಟು ಮಂದಿ ಇದ್ದಾರೆ. ಅವರಿಗೆಲ್ಲ ಮುಂದಿನ ಬಾರಿ ಅವಕಾಶಗಳು ಸಿಗಲಿವೆ" ಎಂದರು.












Click it and Unblock the Notifications