ಚಿಕ್ಕಮಗಳೂರು: ಜಿ.ಪಂ ಅಧ್ಯಕ್ಷೆ ರಾಜೀನಾಮೆಗೆ ಸ್ವಪಕ್ಷಿಯ ಸದಸ್ಯರ ಆಗ್ರಹ
ಚಿಕ್ಕಮಗಳೂರು, ನವೆಂಬರ್ 18: ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ, ಸಾಮಾನ್ಯ ಸಭೆಯಿಂದ ಸ್ವಪಕ್ಷಿಯ ಬಿಜೆಪಿ ಸದಸ್ಯರೇ ಹೊರನಡೆದ ಘಟನೆ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ನಡೆದಿದೆ.
ಜಿ.ಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಬಾವಿಗಿಳಿದು ಧಿಕ್ಕಾರ ಕೂಗಿದರು. ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು.
ಜಿ.ಪಂ ಸಾಮಾನ್ಯ ಸಭೆ ಮುಂದುವರೆಸಲು ಅವಕಾಶ ಕೊಡಿ ಎಂದು ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಪರಿ ಪರಿಯಾಗಿ ಮನವಿ ಮಾಡಿ ಮಾಡಿಕೊಂಡರೂ, ಬಿಜೆಪಿ ಸದಸ್ಯರು ಅವಕಾಶ ನೀಡಲಿಲ್ಲ. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಸದಸ್ಯರ ನಡುವೆ ಮಾತಿನ ಚಕಮಕಿ ಜೋರಾಗಿ, ಸಭೆಯಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು. ಕೊನೆಗೆ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದರು. ಈ ಮೂಲಕ ಸತತ ಮೂರನೇ ಬಾರಿಗೆ ಜಿಲ್ಲಾ ಪಂಚಾಯತಿ ಸಭೆಯನ್ನು ಬಿಜೆಪಿ ಸದಸ್ಯರು ಬಹಿಷ್ಕರಿಸಿದಂತಾಗಿದೆ.
ಒಂದೆಡೆ ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲ್ಲ ಎಂದು ಸುಜಾತ ಕೃಷ್ಣಪ್ಪ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ರಾಜೀನಾಮೆ ನೀಡಲೇಬೇಕು ಎಂದು ಸ್ವಪಕ್ಷಿಯ ಸದಸ್ಯರು ಆಗ್ರಹಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದರು ಕೂಡಾ, ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿಲ್ಲ. ಇನ್ನು ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಶಾಸಕರಾದ ಬೆಳ್ಳಿ ಪ್ರಕಾಶ್, ಡಿ.ಎಸ್ ಸುರೇಶ್, ಕಾಂಗ್ರೆಸ್ ಶಾಸಕ ರಾಜೇಗೌಡ ಭಾಗವಹಿಸಿದ್ದರು.
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಮಾನತ್ತು

ಚಿಕ್ಕಮಗಳೂರು ಜಿ.ಪಂ. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತ್ತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಪಕ್ಷದ ತೀರ್ಮಾನ ಉಲ್ಲಂಘನೆ, ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಹಾಗೂ ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡದ ಸುಜಾತ ಕೃಷ್ಣಪ್ಪ ಅವರನ್ನು ಅಮಾನತ್ತುಗೊಳಿಸಲಾಗಿದೆ.
ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯತಿಯಲ್ಲಿ ಪ್ರತಿಭಟನೆ ನಡೆಸಿ, ಸಾಮಾನ್ಯ ಸಭೆ ಮಧ್ಯೆಯೇ ಬಿಜೆಪಿ ಸದಸ್ಯರು ಎದ್ದು ಹೊರ ನಡೆದಿದ್ದರು.












Click it and Unblock the Notifications