ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ
ಚಿಕ್ಕಮಗಳೂರು, ಜುಲೈ, 27 : ಮಂಗಳೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ರಾಜ್ಯದೆಲ್ಲೆಡೆ ಪಕ್ಷದ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿಗೆ ಹಿಂದೂ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದು ದುರಂತ ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಜಿಲ್ಲಾ ಕಾರ್ಯದರ್ಶಿ ಶಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಸರ್ಕಾರ ಈ ಹಿಂದೆ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ಕಠಿಣ ಕ್ರಮದ ಭರವಸೆ ನೀಡುತ್ತು. ಆದರೆ ಭರವಸೆ ಭರವಸೆಯಾಗೇ ಉಳಿಯುತ್ತಿದೆ.
ಅಡ್ವಾಣಿ ಹಾಗೂ ವಾಜಪೇಯಿ ಅವರಂತಹ ಮಹಾನ್ ನಾಯಕರು ಕಟ್ಟಿದ ಪಕ್ಷಕ್ಕೆ ಸರ್ಕಾರ ಅವಮಾನ ಮಾಡಿದೆ. ಇನ್ನು ಮುಂದಾದರೂ ಹಿಂದೂಗಳು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉಳಿಸಿಕೊಂಡು ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಆಗ್ರಹಿಸಿ 30ಕ್ಕೂ ಹೆಚ್ಚು ಜನ ರಾಜೀನಾಮೆ ನೀಡಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿ ನಗರದ ಬಿಜೆಪಿ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹಾಗೂ ಹಂತಕರನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಸರ್ಕಾರ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕರ್ತರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರು.

ಇನ್ನು ಇದೆ ವೇಳೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, "ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಆರೋಪಿಗಳನ್ನು ನಡು ರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದರು. ಹಿಂದೂಗಳ ಕೊಲೆಯಾದಾಗ ಪ್ರತಿ ಸಲ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಘಟನೆ ನಡೆದ ಕೆಲವು ದಿನಗಳ ನಂತರ ಯಾವುದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಿಲ್ಲ.

ಸಾವನ್ನಪ್ಪಿದ ಕುಟುಂಬಗಳಿಗೆ ನ್ಯಾಯ ಕೂಡ ಸಿಗುವುದಿಲ್ಲ. ಹಾಗಾಗಿ ಹಿಂದೂಗಳ ಹತ್ಯೆ ಇದೆ ಕೊನೆ ಆಗಬೇಕು. ಮುಂದೆ ಹೀಗಾಗಬಾರದು ಎಂದರೆ ಆರೋಪಿಗಳನ್ನು ನಡು ರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕು," ಎಂದು ಆಕ್ರೋಶ ಹೊರಹಾಕಿದರು.












Click it and Unblock the Notifications