ಓಡಿ ಹೋಗುವ ಜಾಯಮಾನ ನನ್ನದಲ್ಲ: ಚಂದ್ರಪ್ಪ
ಚಿತ್ರದುರ್ಗ, ಮೇ 24: ಸೋಲಿಗೆ ಹೆದರಿ ಓಡಿ ಹೋಗುವ ಜಾಯಮಾನ ನನ್ನದಲ್ಲ ಎಂದು ಮಾಜಿ ಸಂಸದ ಬಿ. ಎನ್. ಚಂದ್ರಪ್ಪ ಉತ್ತರಿಸಿದ್ದಾರೆ. ಚಿತ್ರದುರ್ಗ ಲೋಕಸಭಾ ಸದಸ್ಯನಾಗಿ ಐದು ವರ್ಷಗಳ ಕಾಲ ನಿರೀಕ್ಷೆಗೂ ಮೀರಿ ಕೆಲಸ ಮಾಡಿರುವ ಆತ್ಮವಿಶ್ವಾಸ ನನಗಿದೆ. ಹಳ್ಳಿ ಹಳ್ಳಿಗಳಿಗೂ ಸುತ್ತಿ ಅನುದಾನ ತಲುಪಿಸುವಲ್ಲಿ ಸಫಲನಾಗಿದ್ದೇನೆ. ಆದರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಸೋಲಿಗೆ ಬೆನ್ನು ತೋರಿಸಿ ಓಡಿ ಹೋಗಲ್ಲ. ಚಿತ್ರದುರ್ಗದಲ್ಲಿಯೇ ಮನೆ ಮಾಡಿ ಇಲ್ಲಿಯೇ ಇದ್ದು ಜನಸೇವೆ ಮಾಡುತ್ತೇನೆಂದು ಬಿ.ಎನ್.ಚಂದ್ರಪ್ಪ ವಾಗ್ದಾನ ಮಾಡಿದರು.
ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡ ಬಿ.ಎನ್.ಚಂದ್ರಪ್ಪ ಶುಕ್ರವಾರ ದುರ್ಗದ ಸಿರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಹೊಸ ಮುಖಕ್ಕೆ ಮಣೆ ಹಾಕಿದ ಚಿತ್ರದುರ್ಗದ ಮತದಾರ
ಗೆದ್ದವರಿಗೂ ಗೆಲ್ಲುವ ಭರವಸೆಯಿರಲಿಲ್ಲ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ, ನಾಯಕರುಗಳ ಭರವಸೆ ಮೇಲೆ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದೇವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲಿಯೂ ಅಪಸ್ವರವಿರಲಿಲ್ಲ. ಎಲ್ಲರೂ ಗೆದ್ದಿದ್ದೇವೆ ಎಂದುಕೊಂಡಿದ್ದೆವು. ಜೆಡಿಎಸ್ ನವರು ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನವರು ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ. ಆದರೆ ಗುರುವಾರ ಹೊರ ಬಂದ ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತವಾಗಿತ್ತು. ಈ ಕುರಿತು ವರಿಷ್ಟರು ಚರ್ಚಿಸಿ ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದರು.
ಸೋಲಿನ ಆತಂಕ ನನಗೆ ಇಲ್ಲ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತೇನೆ. ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ ಎಂದರು.
ಕಳಂಕರಹಿತವಾಗಿ ಕೆಲಸ ಮಾಡಿರುವ ನೆಮ್ಮದಿಯಿದೆ. ನಮ್ಮದು ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟ ಪಕ್ಷ. ಸೋಲಿಗೆ ಹೆದರಿ ಓಡುವುದಿಲ್ಲ. ನಿರಂತರವಾಗಿ ಕ್ಷೇತ್ರದ ಜನರ ಜೊತೆಯಿರುತ್ತೇನೆ ಎಂದು ಭರವಸೆ ನೀಡಿದ ಬಿ.ಎನ್.ಚಂದ್ರಪ್ಪ.
ಲೋಕಸಭಾ ಚುನಾವಣೆ : ಕೋಟೆ ನಾಡಿನಲ್ಲಿ ನೆಲ ಕಚ್ಚಿದ ಕಾಂಗ್ರೆಸ್
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಸಚಿವ ಆಂಜನೇಯ, ಮಾಜಿ ಶಾಸಕರಾದ ಡಿ.ಸುಧಾಕರ್, ಎ.ವಿ.ಉಮಾಪತಿ, ಜಿ.ಪಂ.ಸದಸ್ಯ ಬಿ.ಯೋಗೇಶ್ ಬಾಬು, ಜಿ.ಎಸ್.ಮಂಜುನಾಥ್, ಹನುಮಲಿ ಷಣ್ಮುಖಪ್ಪ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.