Budget 2023: ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಎಂದ ಶಾಸಕ ಸಿ.ಟಿ. ರವಿ
ಸಂಸತ್ನಲ್ಲಿ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಎಂದು ಸಿಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ, 01: ಇಂದು ನಿರ್ಮಲಾ ಸೀತಾರಮನ್ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಎಂದರು.
9 ಬಜೆಟ್ಗಳಂತೆ ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಇದು ಯವ ಸಮುದಾಯ, ಮೂಲಸೌಕರ್ಯ, ಪರಿಸರ ಸ್ನೇಹಿ ಬಜೆಟ್ ಆಗಿದೆ. ಆದಾಯ ತೆರಿಗೆ ರಿಯಾಯಿತಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ನೀಡಲಾಗಿದೆ. ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದ್ದು, ಪ್ರಧಾನ ಮಂತ್ರಿಗಳಿಗೆ, ಕೇಂದ್ರ ಹಣಕಾಸಿನ ಖಾತೆ ಸಚಿವೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿ.ಟಿ ರವಿ ಹೇಳಿದರು.
ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ನೀಡಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದರು. ಕೇಂದ್ರ ಸರ್ಕಾರದ 2023ನೇ ಸಾಲಿನ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ದೊರೆತಿದೆ. ಸಾಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಎಲ್ಲರನ್ನೂ ಒಳಗೊಳ್ಳುವ ಪ್ರಗತಿಯ ಗುರಿಯೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಜೆಟ್ ನೀಡಿದೆ. 2019 ನೇ ಆರ್ಥಿಕ ವರ್ಷದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಟ್ಟು ಬಜೆಟ್ನಲ್ಲಿ ಶೇ.1.4 ರಷ್ಟು ಅನುದಾನ ಮೀಸಲಿಟ್ಟಿದ್ದು, 2023 ನೇ ಸಾಲಿನಲ್ಲಿ ಶೇ.2.1 ರಷ್ಟು ಮೀಸಲಿಡಲಾಗಿದೆ. ಈ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಆದ್ಯತೆ ನೀಡಲಾಗಿದೆ ಎಂದು ಸುಧಾಕರ್ ಅವರು ಸಂತಸ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ ಬಗ್ಗೆ ಸುಧಾಕರ್ ಹೇಳಿದ್ದೇನು?
2104 ರಿಂದ ದೇಶದಲ್ಲಿ ವಿವಿಧೆಡೆ 157 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದು, ಈ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಲಾಗಿದೆ. ಸಿಕಲ್ ಸೆಲ್ ಅನೀಮಿಯಾದ ನಿವಾರಣೆಗಾಗಿ ಪ್ರತ್ಯೇಕವಾದ ಅಭಿಯಾನ ಆರಂಭಿಸಲಾಗುತ್ತದೆ. ಫಾರ್ಮಾ ಉದ್ಯಮದಲ್ಲಿ ಸಂಶೋಧನೆಗೆ ಪ್ರೋತ್ಸಾಹಿಸಲು ಕಾರ್ಯಕ್ರಮ, ನಿಗದಿತ ಐಸಿಎಂಆರ್ ಲ್ಯಾಬ್ಗಳಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಸಂಶೋಧನೆಗೆ ಕಾರ್ಯಕ್ರಮ ರೂಪಿಸುವುದಾಗಿ ಬಜೆಟ್ನಲ್ಲಿ ತಿಳಿಸಲಾಗಿದೆ. ಇದು ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆಗಳು ಎಂದು ಶ್ಲಾಘಿಸಿದರು.












Click it and Unblock the Notifications