ಇಂದಿನಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಆರಂಭ
ಚಿಕ್ಕಮಗಳೂರು, ಆಗಸ್ಟ್ 30: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರ ಆರಂಭಗೊಂಡಿದೆ.
ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಗೆ ಚಿಕ್ಕಮಗಳೂರಿನಿಂದ ಮಂಗಳೂರು, ಉಡುಪಿ, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಚಾರ್ಮಾಡಿ ಘಾಟಿ ರಸ್ತೆಯ ಹಲವು ಕಡೆ ಗುಡ್ಡ ಕುಸಿದಿದ್ದ ಪರಿಣಾಮ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಗಿಯದ ಕಾರಣ ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.
ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಲಘು ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲಾಧಿಕಾರಿ ಬಗಾದಿ ಗೌತಮ್, ಕಾರು, ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರ ಆರಂಭಕ್ಕೆ ಸದ್ಯಕ್ಕೆ ಅನುಮತಿ ನೀಡಿ ಆದೇಶಿಸಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಚಾರ ಆರಂಭಗೊಂಡಿದ್ದು, ಸಂಜೆ 6ರವರೆಗೆ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಬಸ್ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ಇನ್ನೂ ರಸ್ತೆ ತೆರವಾಗಿಲ್ಲ.












Click it and Unblock the Notifications