Heavy Rain: ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ: ಬೆಚ್ಚಿದ ಮುಳ್ಳಯ್ಯನ ಗಿರಿ!
ಚಿಕ್ಕಮಗಳೂರು ಅಕ್ಟೋಬರ್ 20: ರಾಜ್ಯದೆಲ್ಲೆಡೆ ಅಕ್ಟೋಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಹೆಚ್ಚಾಗಿದೆ. ವಿಶೇಷವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ದಾಖಲಾಗಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ 2 ಅಡಿ ಮಳೆ ನೀರು ನಿಂತುಕೊಂಡಿದೆ.
ಹೌದು... ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಕಳೆದ ದಿನ ಸುರಿದ ಭಾರೀ ಮಳೆಗೆ ದತ್ತಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿದಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆಯಾಗಿದ್ದಾರೆ. ಮಳೆ ಮಧ್ಯೆ ಸಿಲುಕಿದ ಪ್ರವಾಸಿಗರು ಮುಳ್ಳಯ್ಯನಗಿರಿ ಸಹವಾಸವೇ ಬೇಡ ಎನ್ನುವಷ್ಟು ಬೆದರಿ ಹೋಗಿದ್ದಾರೆ.

ಸಾವಿರಾರು ಅಡಿ ಆಳ ಇರುವ ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆರಾಯನ ಅರ್ಭಟ ನಿಲ್ಲುತ್ತಲೇ ಇಲ್ಲ. ಆದರೆ ಎಷ್ಟೇ ಮಳೆ ಸುರಿದರೂ ನೀರು ಹರಿದು ಹೋಗುತ್ತದೆ. ಆದರೀಗ ಹಿಂಗಾರು ಮಳೆ ಅಬ್ಬರಕ್ಕೆ ಅಂತಹಾ ಪಶ್ಚಿಮ ಘಟ್ಟವೇ ಬೆದರಿ ಹೋಗಿದೆ. ಮುಗಿಲೆತ್ತರದ ಬೆಟ್ಟಗಳ ಮೇಲೆ 2 ಅಡಿ ನೀರು ನಿಂತಿದೆ ಅಂದರೆ ಮಳೆ ಪ್ರಮಾಣ ಹೇಗಿರಬಹುದು ಎಂದು ನೀವೆ ಲೆಕ್ಕ ಹಾಕಿ.
ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ
ಶಿವಮೊಗ್ಗದಲ್ಲೂ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಾಗುತ್ತದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದ್ದು, ಆತಂಕದಲ್ಲಿ ಜನ ಜೀವನ ನಡೆಸುವಂತಾಗಿದೆ. ಅಲ್ಲದೆ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು ರಸ್ತೆಗಳು ನದಿಗಳಂತಾಗಿವೆ.
ಇಡೀ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಇವತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ರಾತ್ರಿ 11 ಗಂಟೆ ಹೊತ್ತಿಗೆ ಆರಂಭವಾದ ಮಳೆ ಬಿಡುವು ನೀಡದೆ ಅಬ್ಬರಿಸುತ್ತಿದೆ. ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಇವತ್ತು ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಗರ, ಹೊಸನಗರ, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕುಗಳಲ್ಲಿ ಭಾರಿ ಮಳೆಯ ಅಲರ್ಟ್ ಇದೆ. ತೀರ್ಥಹಳ್ಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ತಿಳಿಸಿದೆ.
ರಾಜ್ಯದಲ್ಲಿ ಮಳೆ ಅಲರ್ಟ್: ಎಲ್ಲೆಲ್ಲಿ?
ಬೆಂಗಲೂರು ಸೇರಿದಂತೆ ರಾಜ್ಯದೆಲ್ಲೆಡೆ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಹಿಂಗಾರು ಮಳೆ ಮತ್ತಷ್ಟು ಹೆಚ್ಚಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಒಂದು ವಾರದ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.
ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಅಧಿಕ ಮಳೆಯಾಗಲಿದೆ. ಹೀಗಾಗಿ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಮುಂದುವರೆಯಲಿದ್ದು, ತುಮಕೂರು, ಕೋಲಾರ, ದಾವಣಗೆರೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣದಿಂದ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಭಾನುವಾರವೂ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಕರಾವಳಿಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications