ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಡಿಸಿ ಸೂಚನೆ
ಚಿಕ್ಕಮಗಳೂರು, ಜುಲೈ 30: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯವರಿಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಉಂಟಾಗಿರುವ ಹಾನಿ - ಪರಿಹಾರ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ತಹಶೀಲ್ದಾರ್, ಇಓ ಮತ್ತು ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ ಆಗಿರುವ ನಷ್ಟದ ಕುರಿತು ಆಯಾಯ ವಿಧಾನ ಸಭೆಯ ಶಾಸಕರ ಗಮನಕ್ಕೆ ತಂದು ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಅಲ್ಲದೇ ಬೆಳೆ ನಷ್ಟ, ಮನೆಗಳ ಹಾನಿ ಹಾಗೂ ರಸ್ತೆ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸರ್ಕಾರ ನಿಯಮಗಳ ಜೊತೆಗೆ ಮಾನವೀಯತೆ ಆಧಾರದಿಂದ ಪರಿಗಣಿಸಿ ನೊಂದ ಜನರಿಗೆ ಸಕಾಲದಲ್ಲಿ ಪರಿಹಾರ ನೀಡುವಂತೆ ಸೂಚಿಸಿದರು.
ಮುಂದೆ ಮಳೆ ಸಂದರ್ಭದಲ್ಲಿ ಜನ - ಜನುವಾರು ಮತ್ತಿತರ ಸಮಸ್ಯೆಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ ಮುಂಜಾಗ್ರತೆ ವಹಿಸಿ ಕೆಲಸ ಮಾಡಬೇಕು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಟ್ಟಡಗಳನ್ನು ಪರಿಶೀಲಿಸಿ ದುರಸ್ಥಿ ಮತ್ತು ಸುವ್ಯವಸ್ಥೆಯಾಗಿ ಇಟ್ಟುಕೊಳ್ಳಬೇಕು. ಈ ಬಗ್ಗೆ ಎಲ್ಲಾ ಅಧಿಕಾರಿಗಳು ಕ್ರಮ ವಹಿಸಿ ಅಗತ್ಯವಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಹೇಳಿದ ಅವರು.
ಮಳೆಗಾಲ ಆಗಿರುವುದರಿಂದ ಆರೋಗ್ಯ ಇಲಾಖೆಯು ಹೆಚ್ಚಿನ ಜಾಗೃತಿ ವಹಿಸಿ. ಆರೋಗ್ಯ ಶಿಬಿರಗಳು ಹಾಗೂ ಕೃಷಿ ತೋಟಗಾರಿಕೆ ಇಲಾಖೆಗಳು ಜಿಲ್ಲೆಯಲ್ಲಿ ಆಗಿರುವ ಬಿತ್ತನೆ - ರಸಗೊಬ್ಬರ ಈ ಎಲ್ಲಾ ಮಾಹಿತಿಯನ್ನು ಬೆಳೆ ಹಾನಿ ಸೇರಿದಂತೆ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು, ಎಲ್ಲಾ ಇಲಾಖೆಗಳು ತಮ್ಮ ಜವಾಬ್ದಾರಿಯ ಅರಿತು ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.












Click it and Unblock the Notifications