ಚಿಕ್ಕಮಗಳೂರು: ಪ್ರತಿ ರೈತರಿಂದ 20 ಕ್ವಿಂಟಲ್ ಕೊಬ್ಬರಿ ಖರೀದಿಗೆ ಸೂಚಿಸಿದ ಜಿಲ್ಲಾಧಿಕಾರಿ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ಗೆ 11,750 ರೂಪಾಯಿನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ವರೆಗೆ ಕೊಬ್ಬರಿ ಖರೀದಿ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ 7: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2022-23ನೇ ಸಾಲಿಗೆ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ಗೆ 11,750 ರೂಪಾಯಿನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ವರೆಗೆ ಕೊಬ್ಬರಿ ಖರೀದಿ ಮಾಡುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಉಂಡೆ ಕೊಬ್ಬರಿ ಖರೀದಿ ಸಂಬಂಧ ನಫೆಡ್ ಹಾಗೂ ಎ.ಪಿ.ಎಂ.ಸಿ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಸಂಬಂಧ ಜನವರಿ27 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಾಣಿ ಕಾಲವಧಿಯನ್ನು 45 ದಿನಗಳ ವರೆಗೆ ನಿಗದಿಗೊಳಿಸಲಾಗಿದ್ದು, ನೋಂದಣಿ ಕಾರ್ಯದೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಹೇಳಿದರು.
ಪ್ರತಿ ಎಕರೆಗೆ 6 ಕ್ವಿಂಟಲ್, ಗರಿಷ್ಠ 20 ಕ್ವಿಂಟಲ್ ಕೊಬ್ಬರಿ ಖರೀದಿ ಪ್ರಮಾಣ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರವನ್ನು ತೆರೆದು ಕೊಬ್ಬರಿ ಖರೀದಿಸಲು ಸೂಕ್ತ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದ್ದು, ನಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಉಂಡೆ ಕೊಬ್ಬರಿ ಖರೀದಿಸುವ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ರೈತರಿಂದ ಮಾತ್ರ ಉಂಡೆ ಕೊಬ್ಬರಿಯನ್ನು ಖರೀದಿಸಬೇಕು ಮತ್ತು ಬೆಂಬಲ ಬೆಲೆ ಯೋಜನೆ ಮಾರ್ಗ ಸೂಚಿ ಹಾಗೂ ಆವರ್ತನಿದಿ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಉಂಡೆ ಕೊಬ್ಬರಿಯನ್ನು ಖರೀದಿಸಲು ಪೂರ್ವದಲ್ಲಿ ರೈತರ ನೋಂದಣಿಯನ್ನು ಎನ್.ಐ.ಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಬತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನ ಖರೀದಿಸಲು ಸಿದ್ಧ ಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತಿಕರಿಸಿ ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಬಳಸಬೇಕು ಎಂದು ಹೇಳಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications