ಚಿಕ್ಕಮಗಳೂರು: ಬಿಜೆಪಿ ಟಿಕೆಟ್ಗಾಗಿ ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳ್ತಾರಾ ಗ್ರಂಥಪಾಲಕ ನರೇಂದ್ರ
ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ. ಕಾಲೇಜಿನ ಗ್ರಂಥಪಾಲಕ ನರೇಂದ್ರ ಮೂಡಿಗೆರೆ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿತವಾಗಿದ್ದು, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ 3: ಮೂಡಿಗೆರೆ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲು ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ. ಕಾಲೇಜಿನ ಗ್ರಂಥಪಾಲಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಆರ್ಎಸ್ಎಸ್ನ ಕಟ್ಟಾಳುಯಾಗಿರುವ ನರೇಂದ್ರ ಅವರೇ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿತವಾಗಿದೆ. ಹಾಗಾಗಿ, ಆರ್ಎಸ್ಎಸ್ ಕೂಡ ಈಗಾಗಲೇ ಅವರನ್ನು ಸಂಘದ ಎಲ್ಲಾ ಹುದ್ದೆಯಿಂದ ವಿಮುಕ್ತಿಗೊಳಿಸಿದೆ.
ನರೇಂದ್ರ ಅವರು ಟಿಕೆಟ್ ಘೋಷಣೆಯಾದ ಕೂಡಲೇ ಗ್ರಂಥಪಾಲಕರ ಹುದ್ದೆಗೂ ರಾಜೀನಾಮೆ ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಆದರೂ, ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಲು ಮುಂದಾಗಿದೆ. ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಪಕ್ಷದೊಳಗೆ ತೀವ್ರ ವಿರೋಧ ಇರುವುದರಿಂದ ಬಿಜೆಪಿ ಗುಜರಾತ್ ಮಾದರಿಯಲ್ಲಿ ಹೊಸ ಮುಖಕ್ಕೆ ಮಣೆ ಹಾಕಲು ಚಿಂತಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಗುಜರಾತ್ ಮಾಡೆಲ್ ಜಾರಿಯಾಗಿದ್ದೇ ಆದಲ್ಲಿ ಕುಮಾರಸ್ವಾಮಿಗೆ ಟಿಕೆಟ್ ಕೈತಪ್ಪುವುದು ಗ್ಯಾರಂಟಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೂಡಿಗೆರೆಯಲ್ಲಿ ಐದಾರು ಜನ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ನರೇಂದ್ರ ಹೆಸರು ಅಚ್ಚರಿ ಎಂಬಂತೆ ಹೊರಬಿದ್ದಿದೆ.
ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದೆ. ಈ ಬಾರಿ ಅನೇಕ ಹೊಸ ಮುಖಗಳು ರಾಜಕೀಯ ಪ್ರವೇಶಕ್ಕೆ ಮುಂದಾಗಿದ್ದು, ವಿವಿಧ ಪಕ್ಷಗಳ ಟಿಕೆಟ್ ಪಡೆಯಲು ಲಾಬಿ ಮಾಡುತ್ತಿದ್ದಾರೆ. ವಿಜಯಪುರ ಜಿಲ್ಲೆಯಲ್ಲೂ ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಅಧಿಕಾರಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದ ಮಹೇಂದ್ರ ನಾಯಕ್ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾಗಠಾಣ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪೊಲೀಸ್ ಕೆಲಸ ತೊರೆದಿರುವ ಅವರು ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದ್ದು, ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದಾರೆ. ನಾಗಠಾಣ ಲಂಬಾಣಿ ಸಮುದಾಯದ ಪ್ರಭಾವ ಇರುವ ಕ್ಷೇತ್ರವಾಗಿದ್ದು, ಒಂದು ವೇಳೆ ಬಿಜೆಪಿ ಮಹೇಂದ್ರ ನಾಯಕ್ಗೆ ಟಿಕೆಟ್ ನೀಡಿದರೆ ಕ್ಷೇತ್ರ ಜನರು ತಮ್ಮ ಸಮುದಾಯದ ಮಹೇಂದ್ರ ಕುಮಾರ್ ನಾಯಕ್ ಅವರ ಕೈ ಹಿಡಿಯುತ್ತಾರೆಯೇ ಎನ್ನುವ ಕುತೂಹಲ ರಾಜಕೀಯ ವಲಯದಲ್ಲಿದೆ.












Click it and Unblock the Notifications