ದತ್ತಮಾಲಾ ಅಭಿಯಾನ ಶೋಭಾಯಾತ್ರೆ : ಬಿಗಿ ಪೊಲೀಸ್ ಬಂದೋಬಸ್ತ್, ಸಂಚಾರ ಮಾರ್ಗ ಬದಲಾವಣೆ
ಚಿಕ್ಕಮಗಳೂರು, ನವೆಂಬರ್ 12 : ಶ್ರೀರಾಮಸೇನೆ ವತಿಯಿಂದ 18ನೇ ವರ್ಷದ ದತ್ತಮಾಲಾ ಅಭಿಯಾನದ ಶೋಭಾಯಾತ್ರೆ ಮತ್ತು ದತ್ತಪಾದುಕೆ ದರ್ಶನ ಭಾನುವಾರ ನಡೆಯಲಿದ್ದು, ಈ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಕೇಸರಿ ಬಾವುಟಗಳಿಂದ ಅಲಂಕರಿಸಲಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ದತ್ತಮಾಲಾ ಅಭಿಯಾನದ ಹಿನ್ನಲೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಸ್.ಪಿ.ಉಮಾ ಪ್ರಶಾಂತ್ ಭದ್ರತೆಯ ಮೇಲುಸ್ತುವಾರಿ ವಹಿಸಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಮೂರು ಡಿವೈಎಸ್ಪಿ, 18 ಸಿಪಿಐ, 67 ಪಿಎಸ್ಐ, 147 ಎಎಸ್ಐ, 851 ಸಿಎಚ್ಸಿ ಮತ್ತು ಸಿಪಿಸಿ, 200 ಹೋಮ್ ಗಾರ್ಡ್ಗಳನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ.
ಪಂಚಮಸಾಲಿ ಪೀಠ ಏಕೆ ಬೇಕಿತ್ತು: ವಚನಾನಂದ ಸ್ವಾಮೀಜಿ ಆಕ್ರೋಶ
ಹೊರ ಜಿಲ್ಲೆಗಳಿಂದ ಆಗಮಿಸುವ ವಾಹನಗಳ ಮೇಲೆ ಕಣ್ಣಿಟ್ಟಿದ್ದು 26 ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಶೋಭಾಯಾತ್ರೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧವನ್ನು ನವೆಂಬರ್ 13 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸವನಹಳ್ಳಿ ಮುಖ್ಯರಸ್ತೆ (ಕೆ.ಇ.ಬಿ ಈದ್ಗಾ ಸರ್ಕಲ್ ನಿಂದ ಹನುಮಂತಪ್ಪ ವೃತ್ತದವರೆಗೆ) ಮತ್ತು ಎಂ.ಜಿ ರಸ್ತೆಯಲ್ಲಿ (ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದ ವರೆಗೆ) ಸಂಚಾರ ಮತ್ತು ನಿಲುಗಡೆಯನ್ನು ನೀಷೇಧಿಸಿದೆ.
ಸಂಚಾರ ಮಾರ್ಗದಲ್ಲಿ ಬದಲಾವಣೆ
ಈ ಮೆರವಣಿಗೆ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕ ವಾಹನಗಳು ಬಸವನಹಳ್ಳಿ ಮುಖ್ಯರಸ್ತೆ ಬದಲಾಗಿ ರತ್ನಗಿರಿ ರಸ್ತೆ (ಆರ್.ಜಿ ರಸ್ತೆ) ಮತ್ತು ಎಂ.ಜಿ ರಸ್ತೆಯ ಬದಲಾಗಿ ಐ.ಜಿ ರಸ್ತೆ ಮತ್ತು ಅಂಬೇಡ್ಕರ್ ರಸ್ತೆ (ಮಾರ್ಕೆಟ್ ರಸ್ತೆ) ಮೂಲಕ ಸಂಚರಿಸಲು ತಿಳಿಸಲಾಗಿದೆ.
ಭಾರೀ ವಾಹನಗಳು ಕಡೂರು ಕಡೆಯಿಂದ ಮೂಡಿಗೆರೆ ಕಡೆಗೆ ಹೋಗುವ ಭಾರೀ ವಾಹನಗಳು ಎಐಟಿ ಸರ್ಕಲ್, ಬೈಪಾಸ್, ಪೈ ಸರ್ಕಲ್, ಹಿರೇಮಗಳೂರು, ಕೈಗಾರಿಕಾ ಪ್ರದೇಶ, ರಾಂಪುರದ ಮೂಲಕ ಸಂಚರಿಸಲು ತಿಳಿಸಲಾಗಿದೆ. ಮೂಡಿಗೆರೆ ಕಡೆಯಿಂದ ಕಡೂರು ಕಡೆಗೆ ಹೋಗುವ ಭಾರಿ ವಾಹನಗಳು ರಾಂಪುರ, ಕೈಗಾರಿಕಾ ಪ್ರದೇಶ, ಹಿರೇಮಗಳೂರು, ಪೈ ಸರ್ಕಲ್, ಬೈಪಾಸ್, ಎಐಟಿ ಸರ್ಕಲ್, ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.
ಆಜಾದ್ ಪಾರ್ಕ್ ವೃತ್ತದವರೆಗೆ ಶೋಭಾಯಾತ್ರೆ
ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿಯವರ ದತ್ತಮಾಲಾ ಅಭಿಯಾನ ಕಾರ್ಯಕ್ರಮ ನಡೆಸಲಿದ್ದು ನವೆಂಬರ್ 13 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಬಸವನಹಳ್ಳಿಯ ಮುಖ್ಯರಸ್ತೆಯಲ್ಲಿರುವ ಶಂಕರಮಠದಿಂದ ಬಸವನಹಳ್ಳಿ ಮುಖ್ಯರಸ್ತೆ, ಹನು ಮಂತಪ್ಪ ವೃತ್ತ, ಮಹಾತ್ಮ ಗಾಂಧಿ ರಸ್ತೆ(ಎಂ.ಜಿ. ರಸ್ತೆ) ಮುಖಾಂತರ ಆಜಾದ್ ಪಾರ್ಕ್ ವೃತ್ತದವರೆಗೆ ಶೋಭಾಯಾತ್ರೆ ನಡೆಯಲಿದೆ.
49 ಚೆಕ್ ಪೋಸ್ಟ್
ದತ್ತಮಾಲಾ ಅಭಿಯಾನದ ಹಿನ್ನಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ 49 ಚೆಕ್ ಪೋಸ್ಟ್ಗಳನ್ನು ತೆರೆದಿದೆ. ಪ್ರತಿಯೊಂದು ಚೆಕ್ ಪೋಸ್ಟ್ನಲ್ಲಿ ಇಬ್ಬರು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಿದೆ. ಇದರ ಜೊತೆಗೆ ಪ್ರತಿಯೊಂದು ಕೇಂದ್ರದಲ್ಲಿ ತಲಾ ಇಬ್ಬರು ಸಹಾಯಕ ಸಿಬ್ಬಂದಿ ಸಹ ನಿಯೋಜಿಸಿದೆ. ಇದರ ಜೊತೆಗೆ 27 ಮಂದಿ ವಿಶೇಷ ಕಾರ್ಯ ನಿರ್ವಾಹಕ ದಂಡಾಕಾರಿಗಳಾಗಿ ರಿಸರ್ವ್ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಗುರುತು ಮಾಡಿರುವ ಚೆಕ್ ಪೋಸ್ಟ್ ಹೊರತುಪಡಿಸಿ ಇನ್ನುಳಿದ ಸ್ಥಳಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಈ ಸಿಬ್ಬಂದಿಯನ್ನು ಅಲ್ಲಿಗೆ ನಿಯೋಜಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ.
ಹೊಸ ಆಚರಣೆಗೆ ಅವಕಾಶ ನೀಡದ ಜಿಲ್ಲಾಡಳಿತ
ಶ್ರೀರಾಮಸೇನೆಯ 18ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಈಗಾಗಲೇ ನವೆಂಬರ್ 7ರಂದು ಚಾಲನೆ ನೀಡಲಾಗಿದೆ. ಈ ತಿಂಗಳ ಕೊನೆಯಲ್ಲಿ ಭಜರಂಗದಳ-ವಿಎಚ್ಪಿಯದ್ದು ದತ್ತ ಜಯಂತಿ ನಡೆಯಲಿದೆ. ನವೆಂಬರ್ ತಿಂಗಳ 13ರಂದು ದತ್ತಪೀಠದಲ್ಲಿ ಮಾಲೆ ಧರಿಸಿರುವ ಸಾವಿರಾರು ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಸಾವಿರಾರು ದತ್ತಮಾಲಾಧಾರಿಗಳು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ಆದರೆ ಈ ಮಧ್ಯೆ ಶ್ರೀರಾಮಸೇನೆ ಜಿಲ್ಲಾಡಳಿತದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದೆ. ಆದರೆ ಈ ಯಾವುದೇ ಹೊಸ ಆಚರಣೆಗೆ ಅವಕಾಶ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.