ಶೃಂಗೇರಿ ಅತ್ಯಾಚಾರ ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ
ಚಿಕ್ಕಮಗಳೂರು, ಫೆಬ್ರವರಿ 09; ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ಮುಂದುವರೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಸನ್ನ, ಅಭಿಷೇಕ್, ಸಾಗರ್, ಸುಗಮ್, ವೆಂಕಟೇಶ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದುವರೆಗೂ 13 ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಪ್ರಕರಣ ದಾಖಲು ಮಾಡಿಕೊಳ್ಳಲು ವಿಳಂಬ ಮಾಡಿದರೂ ಎಂಬ ಕಾರಣಕ್ಕೆ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ವಿಧಾನಸಭೆಯಲ್ಲಿಯೂ ವಿಷಯ ಪ್ರಸ್ತಾಪವಾಗಿತ್ತು.
ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಅತ್ಯಾಚಾರ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದರು. "ಪ್ರಕರಣದಲ್ಲಿ ಆರೋಪಿಗಳಾದ ಬಹುತೇಕರು ರಾಜಕೀಯ ಪಕ್ಷದಲ್ಲಿ, ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ, ನಿಷ್ಪಕ್ಷಪಾತ ತನಿಖೆಯಾಗಬೇಕು" ಎಂದು ಆಗ್ರಹಿಸಿದ್ದರು.
ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿತ್ತು.
ಪ್ರಸ್ತುತ ಎಎಸ್ಪಿ ಶೃತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರೆದಿದೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಹ ಪ್ರತಿಭಟನೆ ನಡೆಸಿತ್ತು.












Click it and Unblock the Notifications