ಮೂಡಿಗೆರೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ, ವೀಕ್ಷಕರ ಎದುರೇ ಗಲಾಟೆ
ಚಿಕ್ಕಮಗಳೂರು, ಡಿಸೆಂಬರ್, 29: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಪೂರ್, ಜಿಲ್ಲಾಧ್ಯಕ್ಷ ಅಂಶುಮಂತ್, ಕಾಂಗ್ರೆಸ್ ಮುಖಂಡರಾದ ಎಚ್.ಎಸ್.ಪುಟ್ಟಸ್ವಾಮಿ ಸೇರಿದಂತೆ ವಿವಿಧ ಮುಖಂಡರು ಹೈಕಮಾಂಡ್ ಆದೇಶದ ಮೇರೆಗೆ ವೀಕ್ಷಕರಾಗಿ ಮೂಡಿಗೆರೆಗೆ ಆಗಮಿಸಿದ್ದರು. ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳಿಂದ ಪಕ್ಷದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. 300-350 ಕಾರ್ಯಕರ್ತರಿಗೆ ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ತಿಳಿಸಲು ಅವಕಾಶವಿತ್ತು. ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಪಟ್ಟಿ ನೀಡಿ, ಅವರ ಹೆಸರಿನ ಮುಂದೆ ತಮ್ಮ ಅಭಿಪ್ರಾಯ ತಿಳಿಸಲು ಸೂಚಿಸಲಾಗಿತ್ತು. ಈ ವೇಳೆ ನಯನಾ ಮೋಟಮ್ಮ ಪರ ಮತ್ತು ವಿರುದ್ಧ ಗುಂಪುಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ವೀಕ್ಷಕರ ಎದುರೇ ಭಿನ್ನಾಭಿಪ್ರಾಯ ಸ್ಫೋಟ
ನಯನಾ ಮೋಟಮ್ಮ ಅವರ ಪರವಾಗಿ ಇರುವವರಿಗೆ ಹೆಚ್ಚು ಅಭಿಪ್ರಾಯ ತಿಳಿಸಲು ಅವಕಾಶವನ್ನು ನೀಡಿದ್ದೀರಿ. ಅವರ ವಿರುದ್ಧದ ಕಾರ್ಯಕರ್ತರ ಹೆಸರುಗಳನ್ನ ಬಿಟ್ಟಿದ್ದೀರಾ ಎಂದು ನಯನಾ ಮೋಟಮ್ಮ ವಿರುದ್ಧ ಗುಂಪಿನ ಕಾರ್ಯಕರ್ತರು, ಮುಖಂಡರು ಆರೋಪಿಸಿ ಜಿಲ್ಲಾಧ್ಯಕ್ಷರ ಜೊತೆ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಪರಸ್ಪರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಕೈ-ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. ಈ ಸಂದರ್ಭದಲ್ಲಿ ಮುಖಂಡರು ಮಧ್ಯಪ್ರವೇಶಿಸಿ ಗಲಾಟೆಯನ್ನು ನಿಯಂತ್ರಿಸಿದ್ದಾರೆ. ಮಾಜಿ ಸಚಿವೆ ಮೋಟಮ್ಮನವರೇ ಅಭ್ಯರ್ಥಿ ಆಗಬೇಕು ಎಂದು ಅನೇಕ ಮುಖಂಡರು, ಕಾರ್ಯಕರ್ತರು ವೀಕ್ಷಕರೆದುರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಟಿಕೆಟ್ ವಿಚಾರದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಾಭಿಪ್ರಾಯ ಇದೀಗ ವೀಕ್ಷಕರ ಎದುರೇ ಸ್ಫೋಟಗೊಂಡಿದೆ.

ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ಆಗಿಲ್ಲ. ಮತ್ತೊಂದೆಡೆ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ. ರಾಜ್ಯದಿಂದ ಗೆದ್ದು ಕೇಂದ್ರಕ್ಕೆ ಹೋದ ಸಂಸದರು ಬಾಯಿ ಬಿಡುತ್ತಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಮೂಡಿಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಬಿ.ನಿಂಗಯ್ಯ ಇತ್ತೀಚೆಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಅವರು, ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಂಚರತ್ನ ಯಾತ್ರೆಗೆ ರಾಜ್ಯಾದ್ಯಂತ ಜನರಿಂದ ಬೆಂಬಲ, ಪ್ರಶಂಸೆ ವ್ಯಕ್ತ ವಾಗುತ್ತಿದೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ, ಕೃಷಿ, ಆರೋಗ್ಯ, ವಸತಿ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಿ ಜನರ ಅಭಿವೃದ್ಧಿಗಾಗಿ ಶ್ರಮಿಸಲಿದೆ. ಅಲ್ಲದೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದರು.












Click it and Unblock the Notifications