ಧರ್ಮೇಗೌಡರ ಅಂತಿಮ ದರ್ಶನ ಪಡೆದ ಮಾಜಿ ಸಿಎಂ
ಚಿಕ್ಕಮಗಳೂರು, ಡಿಸೆಂಬರ್ 29: ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ ಅವರು ಎಸ್.ಎಲ್ ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನದ ವೇಳೆ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಕಣ್ಣೀರಿಟ್ಟರು. ತಲೆ ಚಚ್ಚಿಕೊಂಡು ಕಣ್ಣೀರಾದ ಕುಮಾರಸ್ವಾಮಿ ಅವರನ್ನು ಎಸ್.ಎಲ್ ಭೋಜೇಗೌಡ ತಬ್ಬಿಕೊಂಡು ಕಣ್ಣೀರಿಟ್ಟು ಗೋಳಾಡಿದರು.

ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಈ ರೀತಿಯ ಘಟನೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಎಸ್.ಎಲ್ ಧರ್ಮೇಗೌಡ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ದಾಖಲೆ ಸಾಧಿಸಿದ್ದರು. ಯಾರಿಗೂ ಸಣ್ಣ ನೋವಾಗದಂತೆ ನಡೆದುಕೊಂಡವರು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಧರ್ಮೇಗೌಡರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಯಡಿಯೂರಪ್ಪ, ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದರು.

ಇದೇ ವೇಳೆ ಸಖರಾಯಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ವಿಧಾನ ಪರಿಷತ್ತಿನ ಉಪ ಸಭಾಪತಿ ಧರ್ಮೇಗೌಡರಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಧರ್ಮೇಗೌಡರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಬಸವರಾಜ್ ಹೊರಟ್ಟಿ ಇದ್ದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಎಸ್.ಎಲ್ ಧರ್ಮೇಗೌಡರ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಸಚಿವ ಎಚ್ ಡಿ.ರೇವಣ್ಣ ಸಹ ಆಗಮಿಸಿದ್ದರು. ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಯಿತು.












Click it and Unblock the Notifications