ಟಿಕೆಟ್ ಗೊಂದಲ: ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ರಂಪಾಟ
ಚಿಕ್ಕಮಗಳುರು, ಏಪ್ರಿಲ್ 1: ಕಾಫಿನಾಡು ಚಿಕ್ಕಮಗಳೂರಿನ ಕಾಂಗ್ರೆಸ್ನಲ್ಲಿ ಮೂಲ-ವಲಸಿಗ ಕಾಂಗ್ರೆಸಿಗರ ನಡುವಿನ ಸಮರ ತೀವ್ರವಾಗಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ಕೈ ಮೀರಿದ್ದು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಕೈ-ಕೈ ಮಿಲಾಯಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಆಯ್ಕೆ ಕುರಿತು ಶನಿವಾರ ಸಭೆ ನಡೆದಿದೆ. ಕಾಂಗ್ರೆಸ್ ಕಚೇರಿಯಲ್ಲಿ, ಮೂಲ ಕಾಂಗ್ರೆಸ್ಸಿಗರ ಸಭೆಯಲ್ಲಿ ಅರ್ಜಿ ಹಾಕದವರ ಹೆಸರು ಯಾಕೆ ಕೇಳಿ ಬರುತ್ತಿದೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಅರ್ಜಿ ಹಾಕಿರುವವರ ಹೆಸರು ಹೇಳಿ, ಅವರಿಗೆ ಟಿಕೆಟ್ ಕೊಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಪರೋಕ್ಷವಾಗಿ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಎಚ್.ಡಿ.ತಮ್ಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

ಎ.ಡಿ.ತಮ್ಮಯ್ಯ ಬಿಜೆಪಿ ಶಾಸಕ ಸಿ.ಟಿ. ರವಿ ಆಪ್ತರಾಗಿದ್ದರು. ಈ ಬಾರಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಮ್ಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಹೀಗಾಗಿ ಸಭೆ ನಡೆಸಿದ ಕಾರ್ಯಕರ್ತರು ಜಿಲ್ಲೆಯಲ್ಲಿ ಮೂಲ ಕಾಂಗ್ರೆಸ್ ನಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಸಭೆಯಲ್ಲಿ ತೀವ್ರ ಕಿಡಿಕಾರಿದ್ದಾರೆ.
ಟಿಕೆಟ್ ಬೇಕಾದವರು ಐದರಿಂದ ಹತ್ತು ವರ್ಷ ಪಕ್ಷದಲ್ಲಿ ದುಡಿಯಲಿ, ಆಮೇಲೆ ಅವರಿಗೆ ಟಿಕೆಟ್ ಕೊಡಲಿ. ಅರ್ಜಿ ಹಾಕಿಲ್ಲ, ಬಂದ ಕೂಡಲೇ ಟಿಕೆಟ್ ನೀಡುವುದು ಅಂದರೆ ಹತ್ತು-ಇಪ್ಪತ್ತು ವರ್ಷದಿಂದ ಪಕ್ಷ ಸಂಘಟನೆ ಮಾಡಿದವರು ಏನು ಮಾಡಬೇಕು ಎಂದು ಮೂಲ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜೇಗೌಡ ಯಾರಿಗೆ ಟಿಕೆಟ್ ಕೊಟ್ಟರೂ ಒಂದಾಗಿ ಕೆಲಸ ಮಾಡೋಣ ಎಂದು ಹೇಳಿದ್ದು, ಮಂಜೇಗೌಡರ ಮಾತಿಗೆ ಕಾರ್ಯಕರ್ತರು ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾರಿಗೋ ಅಲ್ಲ, ನಮ್ಮ ಮೂಲ ಕಾಂಗ್ರೆಸ್ ಮುಖಂಡರಿಗೆ ಟಿಕೆಟ್ ನೀಡಿದರೆ, ಕೆಲಸ ಮಾಡುವುದಾಗಿ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ನೋಡ ನೋಡುತ್ತಿದ್ದಂತೆ ಕಾರ್ಯಕರ್ತರ ಮಧ್ಯೆ ವಾಕ್ಸಮರವಾಗಿದ್ದು, ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಕೈ-ಕೈ ಮಿಲಾಯಿಸಿದ್ದಾರೆ.












Click it and Unblock the Notifications