ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು, ಮೇ 23; ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಗೋಣಿಬೀಡು ಪೊಲೀಸ್ ಠಾಣೆ ಪಿಎಸ್ಐ ಅರ್ಜುನ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಕಿರುಗಂದ ಗ್ರಾಮದ ಯುವಕ ಪುನೀತ್ ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಿಸಲಾಗಿದೆ.
ಯುವಕ ಪುನೀತ್ ವಿವಾಹಿತ ಮಹಿಳೆಯನ್ನು ಪೀಡಿಸುತ್ತಿದ್ದ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಠಾಣೆಗೆ ಆತನನ್ನು ಕರೆತರಲಾಗಿತ್ತು. ವಿಚಾರಣೆ ಸಮಯದಲ್ಲಿ ಪಿಎಸ್ಐ ಅರ್ಜುನ್ ಜಾತಿ ನಿಂದನೆ ಮಾಡಿದ್ದಾರೆ ಮತ್ತು ಮೂತ್ರ ಕುಡಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಯುವಕ ಪುನೀತ್ ನೀಡಿದ ದೂರನ್ನು ಆಧರಿಸಿ ಐಪಿಸಿ ಸೆಕ್ಷನ್ 342/ 323/ 504/ 506/ 330/ 348 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲು ಮಾಡಲಾಗಿದೆ.
ತನಿಖೆಗೆ ಆದೇಶ; ಈ ಘಟನೆ ಬೆಳಕಿಗೆ ಬಂದ ಬಳಿಕ ಚಿಕ್ಕಮಗಳೂರು ಎಸ್ಪಿ ಎಂ. ಎಚ್. ಅಕ್ಷಯ್ ಈ ಸಂಬಂಧ ತನಿಖೆ ನಡೆಸಲು ಡಿವೈಎಸ್ಪಿ ಒಬ್ಬರನ್ನು ನೇಮಿಸಿದ್ದರು. ಬಳಿಕ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.
ಗೋಣಿಬೀಡು ಠಾಣೆಗೆ ಮಹಿಳಾ ಪಿಎಸ್ಐ ಒಬ್ಬರನ್ನು ನೇಮಕ ಮಾಡಲಾಗಿದೆ. ಈ ಬೆಳವಣಿಗೆಗಳ ಬಳಿಕ ಮೂಡಿಗೆರೆ ತಾಲೂಕಿನ ದಲಿತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಅರ್ಜುನ್ರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು.












Click it and Unblock the Notifications