ಚಿಕ್ಕಮಗಳೂರು; ಪ್ರವಾಸಿಗರಿಗೆ ನಿರ್ಬಂಧ ಹೇರಿ ಡಿಸಿ ಆದೇಶ
ಚಿಕ್ಕಮಗಳೂರು, ಜುಲೈ 6: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧೀಕೃತ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳಿಗೆ ಬರದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದು, ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶ ನೀಡದಂತೆ ಜಿಲ್ಲೆಯ ಹೋಂ ಸ್ಟೇ, ಲಾಡ್ಜ್, ರೆಸಾರ್ಟ್ ಗಳಿಗೆ ಸೂಚಿಸಲಾಗಿದೆ. ಈ ಮುನ್ನವೂ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ, ಜಿಲ್ಲೆಗೆ ಲಗ್ಗೆ ಇಡುತ್ತಿದ್ದ ಪ್ರವಾಸಿಗರಿಗೆ ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಲಾಗಿತ್ತು. ಹೊರ ಜಿಲ್ಲೆ ಅಥವಾ ಹೊರ ರಾಜ್ಯಗಳಿಂದ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲೆಗೆ ಬರದಂತೆ ಸೂಚನೆ ನೀಡಲಾಗಿತ್ತು. ಆದರೂ ಸೂಚನೆಯನ್ನು ಗಂಭೀರವಾಗಿ ಪರಿಗಣಿಸದೆ ಪ್ರವಾಸಿಗರು ಚಿಕ್ಕಮಗಳೂರಿಗೆ ಬರುತ್ತಿದ್ದರು.
ಕೊರೊನಾ ಭೀತಿ: ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಧಿಕಾರಿಯಿಂದ ನಿರ್ಬಂಧ
ಹೀಗಾಗಿ ಪರಿಸ್ಥಿತಿ ಗಂಭೀರತೆಗೆ ಅನುಗುಣವಾಗಿ ನಿರ್ಬಂಧನಾ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ. ಈ ಆದೇಶದನ್ವಯ ಹೊರ ಜಿಲ್ಲೆ, ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರು ಯಾವುದೇ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ತತ್ ಕ್ಷಣದಿಂದ ನಿರ್ಬಂಧಿಸಲಾಗಿದೆ. ಪ್ರವಾಸಿಗರಿಗಾಗಿ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಗಳು ವಸತಿ ಗೃಹಗಳಲ್ಲಿ ವಸತಿ ಉದ್ದೇಶಕ್ಕೆ ನೀಡುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಕೊರೊನಾ ನಿಯಂತ್ರಣದ ಸಂಬಂಧ ಮುಂಜಾಗ್ರತಾ ಕ್ರಮಕ್ಕೆ ಆದ್ಯತೆ ನೀಡಿ ಕಡ್ಡಾಯವಾಗಿ ಪಾಲಿಸುವ ನಿಬಂಧನೆಗೊಳಪಟ್ಟು ಜಿಲ್ಲೆಯ ಒಳಗೆ ಪ್ರಯಾಣಿಸಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.