ಕರಡು ಮತದಾರರ ಪಟ್ಟಿ ಪ್ರಕಟ; ಗುರುತಿನ ಚೀಟಿ ಪರಿಷ್ಕರಣೆಗೆ ಚಿಕ್ಕಮಗಳೂರು ಡಿಸಿ ಸೂಚನೆ
ಚಿಕ್ಕಮಗಳೂರು, ನವೆಂಬರ್, 09: ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ವಿವಿಧ ಚಟುವಟಿಕೆ ಹಾಗೂ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಮತದಾರರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 9,34,769 ಮತದಾರರಿದ್ದು, ಆ ಪೈಕಿ 4,64,228 ಪುರುಷರು ಹಾಗೂ 4,70,505 ಮಹಿಳೆ ಮತದಾರರಿದ್ದಾರೆ. ಅವರಲ್ಲಿ 11,502 ಜನ 18 ರಿಂದ 19 ವರ್ಷ ವಯಸ್ಸಿನ ಯುವ ಮತದಾರಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾದ ಕಾಫಿನಾಡಿನ ಶುಶ್ರೂಷಕಿಯರು
ಭಾರತ ಚುನಾವಣಾ ಆಯೋಗವು 4 ದಿನಗಳ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ನವೆಂಬರ್ 12, 20, ಡಿಸೆಂಬರ್ 3 ಮತ್ತು 4ರಂದು ಅಭಿಯಾನ ನಡೆಯಲಿದೆ. ಅದರಂತೆಯೇ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳು ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮತದಾರರ ಗುರುತಿನ ಚೀಟಿ ಪರಿಷ್ಕರಣೆ
ಡಿಸೆಂಬರ್ 8ರವರೆಗೆ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ತಮ್ಮ ಹೆಸರು, ಜನ್ಮದಿನಾಂಕ, ವಿಳಾಸ ಪರಿಷ್ಕರಣೆ ಹಾಗೂ ಭಾವಚಿತ್ರ ಬದಲಾವಣೆ ಮಾಡಿಕೊಳ್ಳಬಹುದು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬೇಕು. ಮತ್ತು ತಮ್ಮ ಮತಗಟ್ಟೆಯ ಬಗ್ಗೆ ತಿಳಿದುಕೊಳ್ಳಬೇಕು.
ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಂಡಿದೆ-ಶೋಭಾ ಕರಂದ್ಲಾಜೆ ವ್ಯಂಗ್ಯ
ಸಿಇಒ (ಚೀಫ್ ಎಲೆಕ್ಷನ್ ಆಫೀಸರ್) ವೆಬ್ಸೈಟ್ನಲ್ಲಿ ಇದರ ಕುರಿತಾದ ಸಂಪೂರ್ಣ ಮಾಹಿತಿ ಲಭ್ಯವಿರುತ್ತದೆ. ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಬಿಎಲ್ಎ (ಬೂತ್ ಎಲೆಕ್ಷನ್ ಏಜೆಂಟ್) ನೇಮಿಸುವಂತೆ ಸೂಚನೆ ನೀಡಲಾಗುತ್ತದೆ. 18-19 ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಹಾಗೂ ವಿದ್ಯಾರ್ಥಿಗಳ ನೋಂದಣಿಗೆ ವಿಶೇಷ ಅಭಿಯಾನ ನಡೆಸಲಾಗುತ್ತದೆ ಎಂದರು.
ನಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಪಟ್ಟಿಯಲ್ಲಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಲು ನಮೂನೆ-6ಬಿಯನ್ನು ಪರಿಚಯಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಶೇಕಡಾ 72.80 ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲಾಗಿದೆ ಎಂದು ತಿಳಿಸಿದರು.