ಚಿಕ್ಕಮಗಳೂರಿನಲ್ಲಿ ಬಸ್ ಹರಿದು ವಿದ್ಯಾರ್ಥಿನಿ ಸಾವು: ಚಾಲಕ ಪರಾರಿ, ಸಾರ್ವಜನಿಕರ ಆಕ್ರೋಶ
ಚಿಕ್ಕಮಗಳೂರು, ಸೆಪ್ಟೆಂಬರ್ 07: ಅತೀವೇಗವಾಗಿ ಬಂದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲೆ ಮಕ್ಕಳ ಮೇಲೆ ಹರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ತುಳಸಿ (14) ಎನ್ನುವ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು ಹಾಗೂ ಲತಾ ದಂಪತಿಯ ಪುತ್ರಿ ಮೃತ ತುಳಸಿ ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತುಳಸಿ ತಂದೆ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ತುಳಸಿ ಎಂದಿನಂತೆ ಇಂದು ಕೂಡ ಶಾಲೆಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದಳು. ಈ ವೇಳೆ ಯಮಸ್ವರೂಪಿಯಾಗಿ ಬಂದ ಖಾಸಗಿ ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ತುಳಸಿ ಹಾಗೂ ಮತ್ತೋರ್ವ ಬಾಲಕಿ ನಿವೇದಿತಾ ಎನ್ನುವಾಕೆಯನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನಿಸಲಾಗಿತ್ತು. ದುರಾದೃಷ್ಟವಶಾತ್ ತುಳಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸುಮಾರು ಹತ್ತು ಜನರನ್ನು ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಬಳಿಕ ಬಸ್ ಚಾಲಕ ರಾಮು ಎನ್ನುವಾತ ಸ್ಥಳದಿಂದ ಪರಾರಿಯಾಗಿದ್ದು, ತರೀಕೆರೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಅಧಿಕ ವೇಗದ ಖಾಸಗಿ ಬಸ್ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೊಚ್ಚಿಗೆದ್ದ ಸ್ಥಳೀಯರು ಬಸ್ ಮೇಲೆ ಕಲ್ಲು ಎಸೆದಿದ್ದು, ಬಸ್ನ ಗಾಜು ಪುಡಿ..ಪುಡಿಯಾಗಿದೆ.












Click it and Unblock the Notifications