ಮುಂದುವರಿದ ಪಕ್ಷಾಂತರ:ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಬಿ.ಬಿ.ನಿಂಗಯ್ಯ
ಚಿಕ್ಕಮಗಳೂರು, ಏಪ್ರಿಲ್ 28: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಜಾತ್ಯಾತೀತ ಜನತಾದಳದ ಹಿರಿಯ ಮುಖಂಡರಲ್ಲೊಬ್ಬರಾಗಿದ್ದ ಬಿ.ಬಿ. ನಿಂಗಯ್ಯ ಜೆಡಿಎಸ್ ಪಕ್ಷ ತೊರೆದು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಚಲನಚಿತ್ರ ನಟ ಶಿವರಾಜ್ ಕುಮಾರ್ ಅವರ ಪತ್ನಿ ಶ್ರೀಮತಿ ಗೀತಾ ಶಿವರಾಜ್ಕುಮಾರ್ ಹಾಗೂ ಇತರ ಮುಖಂಡರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿಯೇ ಬಿ.ಬಿ. ನಿಂಗಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಳೆದ ಸುಮಾರು ಎರಡು ದಶಕಕ್ಕೂ ಹೆಚ್ಚು ಸಮಯದಿಂದ ಹಿಂದಿನ ಜನತಾಪಕ್ಷ ಮತ್ತು ಈಗಿನ ಜಾತ್ಯಾತೀತ ಜನತಾದಳದಲ್ಲಿ ಸಕ್ರೀಯವಾಗಿದ್ದ ಬಿ.ಬಿ.ನಿಂಗಯ್ಯ ಅವರು ಜನತಾ ಪರಿವಾರದಲ್ಲಿ ಹಿರಿಯ ಮುಖಂಡರಾಗಿದ್ದು, ಯುವ ಜನತಾದಳದ ರಾಜಾಧ್ಯಕ್ಷರಾಗಿ, ಎಸ್ಸಿ, ಎಸ್ಟಿ ಘಟಕದ ರಾಜಾಧ್ಯಕ್ಷರಾಗಿ, ಜಾತ್ಯಾತೀತ ಜನತಾದಳದ ರಾಜ್ಯ ಉಪಾಧ್ಯಕ್ಷರೂ ಸೇರಿದಂತೆ ಪಕ್ಷದಲ್ಲಿ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ್ದರು.
ಮೂರು ಬಾರಿ ಶಾಸಕರೂ ಹಾಗೂ ಸಚಿವರಾಗಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಸಂಘಟನೆ ಮಾಡಿದ್ದ, ನಿಂಗಯ್ಯ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಗೆ ಆರು ತಿಂಗಳ ಮುಂಚಿತವಾಗಿಯೇ ಜೆಡಿಎಸ್ ಮುಖಂಡರು ಅಭ್ಯರ್ಥಿಯೆಂದು ಘೋಷಣೆ ಮಾಡಿದ್ದು, ಈ ಭಾರಿ ಮೂಡಿಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಖಚಿತ ಎಂಬ ವಾತಾವರಣ ನಿರ್ಮಾಣವಾಗಿತ್ತು.
ಆದರೆ ಚುನಾವಣೆ ಘೊಷಣೆಯಾಗಿ ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗ ಬಿಜೆಪಿ ಶಾಸಕರಾಗಿದ್ದ ಎಂ.ಪಿ. ಕುಮಾರಸ್ವಾಮಿಯವರನ್ನು ಕರೆ ತಂದು ಜೆಡಿಎಸ್ ಪಕ್ಷದ ಟಿಕೆಟ್ ನೀಡಿದ್ದರಿಂದ ಬೇಸರಗೊಂಡಿದ್ದ ನಿಂಗಯ್ಯ ಅವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದರು.
ಬಳಿಕ ಕೆಲವು ಕಾಂಗ್ರೆಸ್ ಮುಖಂಡರುಗಳ ಪಕ್ಷಕ್ಕೆ ಆಹ್ವಾನದ ಮೇರೆಗೆ ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆದಿದ್ದರು. ಬಿ.ಬಿ.ನಿಂಗಯ್ಯ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.












Click it and Unblock the Notifications