ಎಚ್.ಡಿ.ತಮ್ಮಯ್ಯ ಬಿಜೆಪಿ ಏಜೆಂಟ್ ಆಗಿದ್ದಾರೆ: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಆಕ್ರೋಶ
ಚಿಕ್ಕಮಗಳೂರು, ಏಪ್ರಿಲ್, 02: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ವೇಳೆಯೇ ಚಿಕ್ಕಮಗಳೂರಿನ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನದ ಕಿಚ್ಚು ಬುಗಿಲೆದ್ದಿದ್ದು, ಪಕ್ಷದ ಟಿಕೆಟ್ ಆಕಾಂಕ್ಷಿಗಳೇ ಎಚ್.ಡಿ.ತಮ್ಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ನಲ್ಲಿ ಮೂಲ ವಲಸಿಗ ಕಾಂಗ್ರೆಸಿಗರ ನಡುವಿನ ಸಮರ ತೀವ್ರವಾಗಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ (ಏಪ್ರಿಲ್ 01) ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯೂ ನಡೆದಿತ್ತು. ಇದೀಗ ಕಾಂಗ್ರೆಸ್ನಲ್ಲಿ ಮತ್ತೆ ಅಸಮಾಧಾನದ ಕೂಗು ಎದ್ದಿದ್ದು, ಎಚ್.ಡಿ.ತಮ್ಮಯ್ಯ ವಿರುದ್ಧ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಆರು ಜನರಲ್ಲೇ ಒಬ್ಬರಿಗೆ ಟಿಕೆಟ್ ಕೊಡಬೇಕು
ಶನಿವಾರ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಳಿಕ ಇಂದು ಮತ್ತೆ ಕಾಂಗ್ರೆಸ್ ಮುಖಂಡರು ಬಹಿರಂಗ ಸಭೆ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸಖರಾಯಪಟ್ಟಣದಲ್ಲಿ ಆರು ಜನ ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಭೆಯಲ್ಲಿ ನಮ್ಮ ಆರು ಜನರಲ್ಲೇ ಒಬ್ಬರಿಗೆ ಟಿಕೆಟ್ ಕೊಡಬೇಕು. ಆರು ಜನರಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಗ್ಗಟ್ಟಿನಲ್ಲಿ ಕೆಲಸ ಮಾಡೋಣ ಎಂದಿದ್ದಾರೆ.
ಅಲ್ಲದೇ ಎಚ್.ಡಿ.ತಮ್ಮಯ್ಯ ಒಬ್ಬ ಬಿಜೆಪಿ ಏಜೆಂಟ್ ಆಗಿದ್ದಾರೆ. ಅವರು ಕಾಂಗ್ರೆಸ್ ಸೇರಿರುವುದೇ ಬಿಜೆಪಿಯನ್ನು ಗೆಲ್ಲಿಸುವುದಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿಯಲ್ಲಿ ಬಣ "ಬಡಿದಾಟ"
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಿಜೆಪಿ ವಲಯದಲ್ಲಿ ದಿನದಿಂದ ದಿನಕ್ಕೆ ಬದಲಾವಣೆಗಳು ಆಗುತ್ತಲೇ ಇವೆ. ಮೂಡಿಗೆರೆ ಕ್ಷೇತ್ರದಿಂದ ಎಂ.ಪಿ.ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬಾರದು ಎಂದು ಒಂದು ಬಣ ಮುಂದಾಗಿದೆ. ಮತ್ತೊಂದೆಡೆ ಬಣ ಎಂ.ಪಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದೆ. ಈ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಉಳಿಸುವಂತೆ ಸಿ.ಟಿ.ರವಿಗೆ ಮನವಿ ಮಾಡಲಾಗಿದೆ.

ಇತ್ತೀಚೆಗಷ್ಟೇ ಎಂ.ಪಿ.ಕುಮಾರಸ್ವಾಮಿಯವರ ಬೆಂಬಲಿತ ಕಾರ್ಯಕರ್ತರು ಸಿ.ಟಿ.ರವಿಯವರ ನಿವಾಸಕ್ಕೆ ಆಗಮಿಸಿದ್ದು, ಮೂಡಿಗೆರೆ ಕ್ಷೇತ್ರದಿಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಮತ್ತು ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಉಳಿಸಬೇಕು ಎಂದು ಆಗ್ರಹಿಸಿದ್ದರು.
ಎಂ.ಪಿ.ಕುಮಾರಸ್ವಾಮಿ ಅವರ ಪರ-ವಿರೋಧದ ಬಣಗಳ ಮುಸುಕಿನ ಗುದ್ದಾಟ ಗುಟ್ಟಾಗಿರದೇ ಸಾರ್ವಜನಿಕವಾಗಿ ಬಹಿರಂಗವಾಗಿದೆ. ಪರ-ವಿರೋಧದ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಟಿಕೆಟ್ ಸಂಬಂಧ ನಡೆಯುತ್ತಿರುವ ಈ ಬಣ ಗುದ್ದಾಟ ಬಿಜೆಪಿ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಬಿಜೆಪಿಯ ಹಿರಿಯ ನಾಯಕರು ಯಾವ ರೀತಿ ಪರಿಹಾರ ಹುಡುಕುತ್ತಾರೆಯೋ ಎನ್ನುವುದನ್ನು ಕಾದುನೋಡಬೇಕಿದೆ ಅಷ್ಟೇ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಈ ಬಾರಿ ಹಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಸ್ವಪಕ್ಷದವರ ವಿರುದ್ಧವೇ ತಿರುಗಿಬಿದ್ದಾರೆ. ಇನ್ನು ಮತ್ತೊಂದೆಡೆ ಇದೇ ರೀತಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೂಡಿಗೆರೆಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ ಸಾವಿರಾರು ಕಾರ್ಯಕರ್ತರು, ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದ್ದರು.
ಇತ್ತೀಚೆಗಷ್ಟೇ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಟ್ಟು ಹೊಸಮುಖಗಳಿಗೆ ಟಿಕೆಟ್ ಕೊಡಿ ಎಂದು ನೂರಾರು ಕಾರ್ಯಕರ್ತರು ಮೂಡಿಗೆರೆಯ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ್ದರು. ತಮ್ಮ ಕಾರ್ಯಕರ್ತರು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ ಕಾರಣ ಬಿ.ಎಸ್. ಯಡಿಯೂರಪ್ಪ ಕೋಪಗೊಂಡು ರೋಡ್ ಶೋ ರದ್ದು ಮಾಡಿ ಹೆಲಿಪ್ಯಾಡ್ನತ್ತ ತೆರಳಿದ್ದರು.
ಈ ವೇಳೆ ಸಿ.ಟಿ. ರವಿ ಮಾತನಾಡಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ? ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು ಎಂದು ಹೇಳುವ ಮೂಲಕ ರಾಷ್ಟ್ರಿಯ ಹೆದ್ದಾರಿಯಲ್ಲಿ ತಮ್ಮ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ನಂತರವೂ ಕೂಡ ಕಾರ್ಯಕರ್ತರು ನಮಗೆ ಕುಮಾರಸ್ವಾಮಿ ಬೇಡವೇ ಬೇಡ ಎಂದು ಹೇಳುವ ಮೂಲಕ ಬಿ.ಎಸ್. ಯಡಿಯೂರಪ್ಪನವರು ಬರುವ ಮಾರ್ಗದಲ್ಲಿ ರಸ್ತೆ ಅಡ್ಡಗಟ್ಟಿ ಕೂಗಾಟ ನಡೆಸಿದ್ದರು.
ಹೆದ್ದಾರಿಯಲ್ಲಿ 1000ಕ್ಕೂ ಅಧಿಕ ಜನರು ಪ್ರತಿಭಟನೆ ನಡೆಸಿದ್ದು, ಹೊಸ ಮುಖಕ್ಕೆ ಟಿಕೆಟ್ ಕೊಡಿ ಎಂದು ಪಟ್ಟುಹಿಡಿದಿದ್ದರು. ಈ ವೇಳೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಪೊಲೀಸರು ಬೇರೆಡೆಗೆ ಕರೆದೊಯ್ದಿದ್ದರು.












Click it and Unblock the Notifications