ರಂಭಾಪುರಿ ಮಠಕ್ಕೆ ಪ್ರಜ್ವಲ್ ರೇವಣ್ಣ ದಿಢೀರ್ ಭೇಟಿ
ಚಿಕ್ಕಮಗಳೂರು, ಫೆಬ್ರವರಿ 25; ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ರಂಭಾಪುರಿ ಮಠಕ್ಕೆ ದಿಢೀರ್ ಭೇಟಿ ನೀಡಿದರು. ನೂರಾರು ಕಾರ್ಯಕರ್ತರ ಜೊತೆ ಅವರು ಮಠಕ್ಕೆ ಆಗಮಿಸಿದ್ದರು.
ಭಾನುವಾರ ಜೆಡಿಎಸ್ ನಾಯಕ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ದಿಢೀರ್ ಭೇಟಿ ನೀಡಿದರು.

ನೂರಾರು ಕಾರ್ಯಕರ್ತರ ಜೊತೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಪ್ರಜ್ವಲ್ ರೇವಣ್ಣ, ಮಠದಲ್ಲಿರುವ ವೀರಭದ್ರೇಶ್ವರ ಸ್ವಾಮಿ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಂಭಾಪುರಿ ಮಠದ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೆಲವು ಕಾಲ ರಂಭಾಪುರಿ ಶ್ರೀಗಳ ಜೊತೆ ಪ್ರಜ್ವಲ್ ರೇವಣ್ಣ ಚರ್ಚೆ ನಡೆಸಿದರು.
ಹಾಸನ ಜಿಲ್ಲೆಯ ಪಕ್ಕದಲ್ಲಿರುವ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ರಂಭಾಪುರಿ ಮಠವಿದೆ. ರಾಜ್ಯದಲ್ಲಿರುವ ಲಿಂಗಾಯತ ಸಮುದಾಯದ ಪ್ರಭಾವಿ ಮಠಗಳಲ್ಲಿ ಇದು ಸಹ ಒಂದು. ವಿವಿಧ ಪಕ್ಷಗಳ ನಾಯಕರು ಮಠಕ್ಕೆ ಆಗಮಿಸುತ್ತಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಯಾರಿಗೆ? ಎಂಬ ಚರ್ಚೆಗಳು ಜೋರಾಗಿವೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂಬ ಕೂಗು ಎದ್ದಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜಿಲ್ಲಾ ಬಿಜೆಪಿ ಮುಖಂಡರ ಜೊತೆ ಭಾನುವಾರ ಸಭೆ ನಡೆಸಿದ್ದಾರೆ.
ಇಂತಹ ಸಂದರ್ಭದಲ್ಲಿಯೇ ಎನ್ಡಿಎ ಮೈತ್ರಿಕೂಟಕ್ಕೆ ಸೇರಿರುವ ಜೆಡಿಎಸ್ನ ಯುವ ನಾಯಕ ಪ್ರಜ್ವಲ್ ರೇವಣ್ಣ ರಂಭಾಪುರ ಮಠಕ್ಕೆ ಭೇಟಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಹಾಸನ ಕ್ಷೇತ್ರ ಜೆಡಿಎಸ್ಗೆ ಸಿಗಲಿದ್ದು, ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿಯೂ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಲ್ಲಿ ಕಣಕ್ಕಿಳಿದರು.
ಹಾಸನ ಜೆಡಿಎಸ್ ಭದ್ರಕೋಟೆ. ಪಕ್ಷದ ಪ್ರಾಬಲ್ಯ, ಎಚ್. ಡಿ. ದೇವೇಗೌಡರ ಪ್ರಭಾವ, ಎಚ್. ಡಿ. ರೇವಣ್ಣ ರಾಜಕೀಯ ಅನುಭವ ಮುಂತಾದವುಗಳ ನೆರವಿನೊಂದಿಗೆ ಮೊದಲ ಚುನಾವಣೆಯಲ್ಲಿಯೇ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದರು. ಅತ್ತ ಹಾಸನ ಬಿಟ್ಟು ತುಮಕೂರಿಗೆ ಹೋದ ದೇವೇಗೌಡರು ಸೋಲು ಕಂಡರು.
2019ರ ಚುನಾವಣೆಯಲ್ಲಿ ಹಾಸನದಲ್ಲಿ ಪ್ರಜ್ವಲ್ ರೇವಣ್ಣ 676,606 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪ್ರಜ್ವಲ್ ರೇವಣ್ಣ ಬೆಂಬಲಿಸಿತ್ತು. ಎದುರಾಳಿಯಾಗಿದ್ದ ಬಿಜೆಪಿ ಅಭ್ಯರ್ಥಿ ಎ. ಮಂಜು 535,282 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಈ ಬಾರಿ ಲೆಕ್ಕಾಚಾರ ಬದಲಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎ. ಮಂಜು ಜೆಡಿಎಸ್ನಲ್ಲಿದ್ದು, ಅರಕಲಗೊಡು ಕ್ಷೇತ್ರದ ಶಾಸಕರು. ಆದ್ದರಿಂದ ಕಾಂಗ್ರೆಸ್ ಎದುರಾಳಿಯನ್ನು ಕಣಕ್ಕಿಳಿಸಬೇಕಿದೆ. ಹಾಸನದಲ್ಲಿ ಗೆಲ್ಲಲು ಕಾಂಗ್ರೆಸ್ ತಂತ್ರ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications