ಚಿಕ್ಕಮಗಳೂರು: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ
ಚಿಕ್ಕಮಗಳೂರು, ಸೆಪ್ಟೆಂಬರ್ 4: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಗುರುವಾರ ಸಂಜೆಯ ಬಳಿಕ ಮಲೆನಾಡಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ, ಬಾಳೆಹೊನ್ನೂರು, ಶೃಂಗೇರಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಗುಡುಗು-ಸಿಡಿಲಿನ ಮಳೆ ಮಲೆನಾಡಿಗರು ಹೈರಾಣಾಗಿದ್ದಾರೆ.
ಬಾಳೆಹೊನ್ನೂರಲ್ಲಿ ಒಂದೇ ಗಂಟೆಗೆ ನಾಲ್ಕು ಇಂಚಿನಷ್ಟು ಮಳೆ ಸುರಿದಿದೆ. ಭತ್ತದ ಗದ್ದೆಗಳ ಮೇಲೆ ಹರಿದ ಮಳೆ ನೀರು ನಿಂತಿದ್ದು, ಬಾಳೆಹೊನ್ನೂರಿನ ದೋಬಿ ಹಳ್ಳ ಮೈದುಂಬಿ ಹರಿದಿದೆ.

ಮೂಡಿಗೆರೆ, ಕೊಪ್ಪ ತಾಲ್ಲೂಕುಗಳಲ್ಲಿ ಮಳೆ ಬಿಟ್ಟು ಬಿಟ್ಟು ಸುರಿಯುತ್ತಿದ್ದರೆ, ಇತ್ತ ಬಯಲುಸೀಮೆ ತರೀಕೆರೆ, ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದ್ದು. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ರವರೆಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಹೆಚ್ಚು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗಲಿದೆ.












Click it and Unblock the Notifications