ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದ ಮೂರು ಮನೆಗಳಿಗೆ ಅಪಾರ ಹಾನಿ
ಚಿಕ್ಕಮಗಳೂರು, ಮೇ, 25: ಈಗಾಗಲೇ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದು, ಇದರಿಂದ ಹಲವೆಡೆ ಅದೆಷ್ಟೋ ಜನ ಮನೆ, ಮಠಗಳನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿನ್ನೆ ತಡರಾತ್ರಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಮೂರು ಮನೆಗಳಿಗೆ ಅಪಾರ ಹಾನಿಯಾಗಿದೆ. ಇನ್ನು ಮನೆ ಕಳೆದುಕೊಂಡವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಅದರಲ್ಲೂ ರೈತರಿಗೆ ಈ ಮಳೆ ಸಂತಸ ತಂದಿದ್ದರೆ, ಮತ್ತೆ ಕೆಲವೆಡೆ ಅನಾಹುತಗಳು ಸಹ ಸೃಷ್ಟಿಯಾಗಿವೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಇದರಿಂದ ಜನ ಬೆಚ್ಚಿ ಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಅಗಲೇರಿ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಈ ಹಿನ್ನೆಲೆ ಮೂರು ಮನೆಗಳಿಗೆ ಅಪಾರ ಹಾನಿ ಆಗಿದೆ. ಅಗಲೇರಿ ಮಂಗಳಮ್ಮ, ರತ್ನಮ್ಮ, ರಂಗಣ್ಣ ಎನ್ನುವವರ ಮೂರು ಮನೆಳಿಗೆ ಹಾನಿ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಳೆಯಿಂದ ಮನೆಯ ಹೆಂಚು, ಶೀಟ್ಗಳಿಗೆ ಹಾನಿಯಾಗಿದ್ದು, ಇದರಿಂದ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಇನ್ನು ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಆಹಾರ ಸಾಮಗ್ರಿ ಹಾಗೂ ಪೀಠೋಪಕರಣಗಳಿಗೂ ಹಾನಿ ಆಗಿದ್ದು, ಇದರಿಂದ ಮನೆ ಮಾಲೀಕರು ಕಂಗಾಲಾಗಿದ್ದಾರೆ. ಹಾಗೆಯೆ ಜಿಲ್ಲೆಯಲ್ಲಿ ಬೆಳಗ್ಗೆಯಲ್ಲ ಬಿಸಿಲಿನ ವಾತಾವರಣ ಮುಂದುವರೆಯುತ್ತಿದ್ದು, ರಾತ್ರಿ ಆಗುತ್ತಿದಂತೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಮಳೆ ಆರ್ಭಟಿಸಲಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ
ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಈಗಾಗಲೇ ಸೂಚನೆ ನೀಡಿದ್ದರು.
ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಈಗಾಗಲೇ ಮೇ 21ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವ ಹಾನಿ, ಬೆಳೆ ಹಾನಿ ಹಾಗೂ ಪಶುಗಳ ಹಾನಿ ಬಗ್ಗೆ ಕೂಡಲೇ ವರದಿ ನೀಡಬೇಕು. ಕೂಡಲೇ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಸೂಚಿಸಿದ್ದರು.
ಕಡೂರು ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 14 ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ ಮೂರು ಹೆಕ್ಟೇರ್ನಲ್ಲಿ ತೆಂಗು, 2.5 ಹೆಕ್ಟೇರ್ನಲ್ಲಿ ಬಾಳೆ ಬೆಳೆ ನಾಶವಾಗಿದೆ. ಬೀರೂರು ವಿಭಾಗದಲ್ಲಿ 10.9 ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ ಬೆಳೆ ನಾಶವಾಗಿದೆ. ಇವುಗಳಿಗೆ ಪರಿಹಾರ ನೀಡುವ ಸಂಬಂಧ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದರು.
ಇನ್ನು ಕಡೂರು ತಹಶೀಲ್ದಾರ್ ಈ ಬಗ್ಗೆ ಮಾತನಾಡಿದ್ದು, ತೋಟದಲ್ಲಿ ನಿರ್ಮಿಸಿರುವ 14 ಮನೆಗಳಿಗೆ ಹಾನಿ ಆಗಿದೆ. ಮನೆಗಳಿಗೆ ಹಾಕಲಾಗಿದ್ದ ತಗಡಿನ ಶೀಟ್ಗಳು ಗಾಳಿಯಲ್ಲಿ ಹಾರಿ ಹೋಗಿವೆ ಎಂದು ಮಾಹಿತಿ ನೀಡಿದ್ದರು.
ಹೀಗೆ ಮಳೆ ಹೆಚ್ಚಾಗುತ್ತಿರುವುದರಿಂದ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಳೆ ಹಾನಿಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ತಿಳಿಸಿದ್ದರು.
ಮಳೆ ಹಾನಿ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕು. ಹಾಗೆಯೆ 24 ಗಂಟೆಯು ಕಂಟ್ರೋಲ್ ರೂಂ ತೆರೆದು ದೂರವಾಣಿ ಕರೆಗಳನ್ನು ಸ್ವೀಕರಿಸಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಹಾವು ಕಡಿತಕ್ಕೆ ಲಸಿಕೆ ಸ್ಟಾಕ್ ಇರಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಫಾಗಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು.












Click it and Unblock the Notifications