ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ: ಜಿಲ್ಲಾಧಿಕಾರಿ ನೀಡಿದ ಸೂಚನೆಗಳೇನು?
ಚಿಕ್ಕಮಗಳೂರು, ಮೇ, 24: ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚಿಸಿದರು.
ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ಈಗಾಗಲೇ ಮೇ 21ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವ ಹಾನಿ, ಬೆಳೆ ಹಾನಿ ಹಾಗೂ ಪಶುಗಳ ಹಾನಿ ಬಗ್ಗೆ ಕೂಡಲೇ ವರದಿ ನೀಡಬೇಕು. ಕೂಡಲೇ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದರು.

ಕಡೂರು ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 14 ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ ಮೂರು ಹೆಕ್ಟೇರ್ನಲ್ಲಿ ತೆಂಗು, 2.5 ಹೆಕ್ಟೇರ್ನಲ್ಲಿ ಬಾಳೆ ಬೆಳೆ ನಾಶವಾಗಿದೆ. ಬೀರೂರು ವಿಭಾಗದಲ್ಲಿ 10.9 ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ ಬೆಳೆ ನಾಶವಾಗಿದೆ. ಇವುಗಳಿಗೆ ಪರಿಹಾರ ನೀಡುವ ಸಂಬಂಧ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಕಡೂರು ತಹಶೀಲ್ದಾರ್ ಈ ಬಗ್ಗೆ ಮಾತನಾಡಿದ್ದು, ತೋಟದಲ್ಲಿ ನಿರ್ಮಿಸಿರುವ 14 ಮನೆಗಳಿಗೆ ಹಾನಿ ಆಗಿದೆ. ಮನೆಗಳಿಗೆ ಹಾಕಲಾಗಿದ್ದ ತಗಡಿನ ಶೀಟ್ಗಳು ಗಾಳಿಯಲ್ಲಿ ಹಾರಿ ಹೋಗಿವೆ ಎಂದು ಮಾಹಿತಿ ನೀಡಿದರು. ಮಳೆ ಹೆಚ್ಚಾಗುತ್ತಿರುವುದರಿಂದ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಳೆ ಹಾನಿಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಮಳೆ ಹಾನಿ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕು. ಹಾಗೆಯೆ 24 ಗಂಟೆಯು ಕಂಟ್ರೋಲ್ ರೂಂ ತೆರೆದು ದೂರವಾಣಿ ಕರೆಗಳನ್ನು ಸ್ವೀಕರಿಸಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಹಾವು ಕಡಿತಕ್ಕೆ ಲಸಿಕೆ ಸ್ಟಾಕ್ ಇರಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಫಾಗಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಮೂಡಿಗೆರೆಯಲ್ಲಿ ಮೇ 21ರಂದು ಬಿರುಗಾಳಿ ಮತ್ತು ಮಳೆಯಿಂದ ಹೋಂ ಸ್ಟೇ ಮಾಲೀಕ ವೇಣುಗೋಪಾಲ್ ಹೋಂ ಸ್ಟೇಗೆ ಹೋಗುವಾಗ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಪರಿಹಾರ ನೀಡಿರುವ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮೃತರ ಕುಟುಂಬದವರು ಇನ್ನೂ ಅವರ ಬ್ಯಾಂಕ್ ಖಾತೆ ಸೇರಿದಂತೆ ದಾಖಲಾತಿಗಳನ್ನು ನೀಡುವಂತೆ ತಿಳಿಸಲಾಗಿದೆ. ಮಾಹಿತಿ ನೀಡಿದ ತಕ್ಷಣ ಅವರ ಖಾತೆಗೆ ಪರಿಹಾರದ ಹಣ ನೀಡಲಾಗುವುದೆಂದು ಚಿಕ್ಕಮಗಳೂರು ವಿಭಾಗದ ಉಪವಿಭಾಗಾಧಿಕಾರಿ ರಾಜೇಶ್ ತಿಳಿಸಿದರು.
ಸಭೆಯ ನಂತರ ಜಿಲ್ಲಾಧಿಕಾರಿಗಳು ಮೂಡಿಗೆರೆಯಲ್ಲಿನ ಮೃತರ ಕುಟುಂಬಕ್ಕೆ ಭೇಟಿ ನೀಡಿ ಸರ್ಕಾರದಿಂದ 5 ಲಕ್ಷ ಮಂಜೂರಾಗಿದ್ದು, ಪರಿಹಾರ ಪತ್ರವನ್ನು ಮೃತರ ಪತ್ನಿ ಕೆ.ಜಿ.ರಾಧಾ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಕಾಲೇಜಿನ ಆವರಣದಲ್ಲಿ ಬಿದ್ದ ಬೃಹತ್ ಮರ
ಹಾಗೆಯೆ ಹಾಸನ ಜಿಲ್ಲೆಯ ವಿವಿಧೆಡೆ ನಿನ್ನೆ ರಾತ್ರಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಪರಿಣಾಮ ಅರಸೀಕೆರೆಯಲ್ಲಿನ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೃಹತ್ ಗಾತ್ರ ಮರವೊಂದು ಬಿದ್ದಿದೆ. ಸದ್ಯ ವಿದ್ಯಾರ್ಥಿಗಳು ಮನೆಗೆ ತೆರಳಿದ್ದರಿಂದ ವೇಳೆ ಮರ ಬಿದ್ದಿದ್ದರಿಂದ ದೊಡ್ಡ ಅನಾಹುತವೇ ತಪ್ಪಿದಂತಾಗಿದೆ. ನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications