ಚಿಕ್ಕಮಗಳೂರು: ಮುಂದಿನ ಮೂರು ದಿನ ಭಾರೀ ಮಳೆ, ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
ಚಿಕ್ಕಮಗಳೂರು, ಜುಲೈ 04: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 3 ದಿನ ಅಂದರೆ ಜುಲೈ5,6 ಹಾಗೂ 7 ರಂದು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಜನರು ಈ ಕೆಳಕಂಡಂತ ಸೂಚನೆಗಳನ್ನು ಪಾಲಿಸ ಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

• ಸಾರ್ವಜನಿಕರು ,ಪ್ರವಾಸಿಗರು ನದಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
• ಮಳೆಯಾಗುವ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ, ಮರಗಳ ಹತ್ತಿರ ನಿಲ್ಲದೇ ಸುರಕ್ಷಿತ ಸ್ಥಳಗಳಿಗೆ ತಲುಪಬೇಕು.
• ವಿದ್ಯಾರ್ಥಿಗಳ ಪೋಷಕರು/ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು.
• ಹಿರಿಯ ನಾಗರಿಕರು/ವಯಸ್ಕರು ಕೆರೆ/ನದಿ ತೀರಕ್ಕೆ, ಹೋಗದಂತೆ ಜಾಗ್ರತೆ ವಹಿಸಬೇಕು, ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳಬೇಕು.
• ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೂಡದೆ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ತಿಳಿಸಿದೆ.
ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೀಟೆ ಮರ
ಇನ್ನು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭಾರಿ ಗಾತ್ರದ ಬೀಟೆ ಮರವೊಂದು ರಸ್ತೆ ಅಡ್ಡಲಾಗಿ ಉರುಳಿ ಬಿದ್ದು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಜಿಲ್ಲೆಯ ಕಳೆದೊಂದು ದಿನದಿಂದ ನಿರಂತರ ಮಳೆಯಾಗುತ್ತಿದ್ದು, ಬೃಹತ್ ಗಾತ್ರದ ಬೀಟೆ ಮರ ಧರೆಗುರುಳಿದೆ. ಸುಮಾರು ಎರಡು ಗಂಟೆಗಳ ಶ್ರಮದ ಬಳಿಕ ಗ್ರಾಮಸ್ಥರು ಮರವನ್ನು ತೆರವುಗೊಳಿಸಿದ್ದರು. ಇನ್ನು ಜಿಲ್ಲೆಯಲ್ಲಿ ಸುರಿದ ಏಕಾಏಕಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ
ನಿರಂತರ ಸುರಿಯುತ್ತಿರುವ ಮಳೆಯಿಂದ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿರುವ ಘಟನೆ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ಎಂ.ಸ್ಯಾಂಡ್ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.












Click it and Unblock the Notifications