ಚಿಕ್ಕಮಗಳೂರು ಮಳೆ ಅಬ್ಬರ, ತುಂಬಿ ಹರಿಯುತ್ತಿರುವ ಭದ್ರೆ
ಚಿಕ್ಕಮಗಳೂರು,ಜುಲೈ 3 : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಭಾಗದಲ್ಲಿ ಕಳೆದ ರಾತ್ರಿ ಸುರಿದಂತಹ ಧಾರಾಕಾರ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಹೆಬ್ಬಾಳೆ ಸೇತುವೆಗೆ ಮುಳುಗುಡೆ ಭೀತಿ ಆವರಿಸಿದೆ. ಕಳಸ ಹಾಗೂ ಕುದುರೆಮುಖ ಸುತ್ತಮುತ್ತ ಶನಿವಾರ ರಾತ್ರಿ 11 ಸುಮಾರಿಗೆ ಆರಂಭವಾದ ಮಳೆ ಬೆಳಗ್ಗಿನ ಜಾವದವರೆಗೂ ಒಂದೇ ಸುಮನೆ ಸುರಿದಿದೆ.
ಭಾರೀ ಮಳೆಯಿಂದ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಕೂಡ ಮುಳುಗುವ ಹಂತ ತಲುಪಿದೆ. ಈ ಸೇತುವೆ ಮುಳುಗಿದರೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸ ಸಂಪರ್ಕ ಕಡಿತಗೊಳ್ಳಲಿದೆ. ದೇವಸ್ಥಾನಕ್ಕೆ ಹೋಗಲು ಅನ್ಯ ಮಾರ್ಗವಿದ್ದರೂ ಸುಮಾರು 8-10 ಕಿ. ಮೀ. ಸುತ್ತಿಬಳಸಿ ಹೋಗಬೇಕು. ಆ ಮಾರ್ಗವೂ ಕಿರಿದಾದ ರಸ್ತೆಯಾಗಿದ್ದು, ದೊಡ್ಡ ವಾಹನಗಳ ಸಂಚಾರ ಕಷ್ಟದಾಯಕವಾಗಿದೆ.
ಇನ್ನು ಈ ಸೇತುವೆಯನ್ನು ಎತ್ತರಿಸಿ ಕೊಡಿ ಎಂದು ಸ್ಥಳೀಯರು ಹತ್ತಾರು ವರ್ಷಗಳಿಂದ ಮನವಿ ಮಾಡಿದರೂ ಸರ್ಕಾರ, ಅಧಿಕಾರಿಗಳು ಯಾರೂ ಸೂಕ್ತವಾಗಿ ಸ್ಪಂದಿಸಿಲ್ಲ. ಪ್ರತಿ ಮಳೆಗಾಲದಲ್ಲೂ ಈ ಸೇತುವೆ ಮುಳುಗಿ ಜನಸಾಮಾನ್ಯರು ತೀವ್ರ ಸಂಕರ್ಷ ಅನುಭವಿಸುತ್ತಿದ್ದಾರೆ.
ಪ್ರತಿ ವರ್ಷ ಒಂದು ಮಳೆಗಾಲಕ್ಕೆ ಕನಿಷ್ಟ 10ಕ್ಕೂ ಹೆಚ್ಚು ಬಾರಿ ಈ ಸೇತುವೆ ಮುಳುಗಲಿದೆ. 2019ರಲ್ಲಿ ನಾಲ್ಕು ದಿನಗಳ ನಿರಂತರವಾಗಿ ಮುಳುಗಿತ್ತು. ಈ ಬಾರಿಯೂ ಒಂದೇ ರಾತ್ರಿಯ ಮಳೆಗೆ ಸೇತುವೆ ಮುಳುಗುವ ಹಂತ ತಲುಪಿದ್ದು ಸ್ಥಳಿಯರು ಆತಂಕದಿಂದ ಇದ್ದಾರೆ.

ತುಂಬಿ ಹರಿಯುತ್ತಿರುವ ನದಿಗಳು
ಮಲೆನಾಡು ಭಾಗದಲ್ಲೂ ಧಾರಾಕಾರ ಮಳೆ ಮುಂದುವರೆದಿದ್ದು ಜಿಲ್ಲೆಯಲ್ಲಿರುವ ನದಿಗಳು ಮೈದುಂಬಿ ಹರಿಯುತ್ತಿವೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್. ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಚಿಕ್ಕಮಗಳೂರು ತಾಲೂಕಿನಲ್ಲೂ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.

ಉರುಳಿಬಿದ್ದಿರುವ ಕಂಬಗಳು
ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಾಗಿದೆ. ಇನ್ನು ಮಲೆನಾಡಿನ ಕೆಲ ಭಾಗದಲ್ಲಿ ಮರಗಳು ಧರೆಗುರುಳಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಇನ್ನು ಕೆಲಭಾಗದಲ್ಲಿ ಮಳೆಯ ಆರ್ಭಟಕ್ಕೆ ವಿದ್ಯುತ್ ಕಂಬಗಳ ಉರುಳಿಬಿದ್ದಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಮಲೆನಾಡಿನ ಕುಗ್ರಾಮದಲ್ಲಿ ಜನರು ಕತ್ತಲಲ್ಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತರ ಮೊಗದಲ್ಲಿ ಮಂದಹಾಸ
ಕಾಫಿನಾಡಲ್ಲಿ ಕೆಲವು ಕಡೆ ಮುಂಗಾರು ಮಳೆ ಚುರುಕುಗೊಂಡ ಬೆನ್ನಲ್ಲೇ ಬಿತ್ತನೆ ಕಾರ್ಯಗಳು ಕೂಡ ಆರಂಭವಾಗಿವೆ. ಚಿಕ್ಕಮಗಳೂರು, ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಲ್ಲಿ ಮೆಕ್ಕೆಜೋಳ, ಈರುಳ್ಳಿ, ಆಲೂಗೆಡ್ಡೆ ಸೇರಿದಂತೆ ಇತರ ಬೆಳೆಗಳು ಬಿತ್ತನೆ ಕಾರ್ಯ ಆರಂಭಗೊಂಡಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೆಲವು ಕಡೆ ಭತ್ತದ ನಾಟಿಗೂ ಸಿದ್ಧಗೊಳ್ಳುತ್ತಿದ್ದಾರೆ.
Recommended Video

ಅಪಾಯದ ಜಾಗದಲ್ಲಿ ಪ್ರವಾಸಿಗರ ಸೆಲ್ಫೀ ಹುಚ್ಚು
ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ನಿರಂತರ ಸುರಿಯುತ್ತಿದೆ. ಮಳೆಯಿಂದ ಹಳ್ಳ, ನದಿಗಳಲ್ಲಿ ನೀರಿನ ಪ್ರಮಾಣವೂ ಏರಿಕೆಯಾಗಿದೆ. ಮುಳುಗುವ ಸೇತುವೆ ಎಂದೇ ಹೆಸರಾಗಿರುವ ಭದ್ರಾ ನದಿಯ ಹೆಬ್ಬಾಳ ಸೇತುವೆಯೂ ಮುಳುಗಡೆ ಆಗಲು ಕೆಲವೇ ಅಡಿಗಳಷ್ಟು ಬಾಕಿ ಉಳಿದಿದೆ. ಆದರೆ ಹೆಬ್ಬಾಳ ಸೇತುವೆ ಮುಳುಗಡೆ ಭೀತಿಯಲ್ಲಿ ಸ್ಥಳೀಯರಲ್ಲಿದ್ದರೆ, ಪ್ರವಾಸಿಗರು ಇದೇ ಜಾಗದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಶುರು ಮಾಡಿದ್ದಾರೆ. ಅಪಾಯದ ಜಾಗದಲ್ಲಿ ನಿಂತು ಸೆಲ್ಫಿಗೆ ಮುಗಿ ಬೀಳುತ್ತಿರುವುದನ್ನು ಕಂಡು ಅಸಮಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications