ಕುದುರೆಮುಖ, ಕೆರೆಕಟ್ಟೆ, ಶೃಂಗೇರಿ, ಮೂಡಿಗೆರೆ ಇತರೆಡೆ ಭಾರೀ ಮಳೆ
ಚಿಕ್ಕಮಗಳೂರು, ಜುಲೈ 21: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ವಾರದಿಂದ ಮಲೆನಾಡಲ್ಲಿ ಸಂಪೂರ್ಣ ಇಳಿಮುಖವಾಗಿದ್ದ ಮಳೆಯು ಶನಿವಾರ ರಾತ್ರಿಯಿಂದ ಮತ್ತೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.
ಭಾರಿ ಮಳೆ ಮನ್ಸೂಚನೆ: ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
ಇದರಿಂದ ಮಲೆನಾಡಿನ ನದಿಗಳಿಗೆ ಜೀವ ಕಳೆ ಬಂದಿದೆ. ಕುದುರೆಮುಖ, ಕೆರೆಕಟ್ಟೆ, ಶೃಂಗೇರಿ, ಮೂಡಿಗೆರೆ, ಕೊಪ್ಪ, ಬಾಳೆಹೊನ್ನೂರು ಹಾಗೂ ಎನ್. ಆರ್. ಪುರದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ- ಭದ್ರಾ- ಹೇಮಾವತಿ ನದಿಯ ಒಳಹರಿವಿನಲ್ಲೂ ಹೆಚ್ಚಳವಾಗಿದೆ. ಶೃಂಗೇರಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿಯು ಈ ವರ್ಷ ಇದೇ ಮೊದಲ ಭಾರಿಗೆ ಮೈದುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ನದಿಪಾತ್ರದಲ್ಲಿನ ಹಲವು ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹವಾಮಾನ ಇಲಾಖೆಯಿಂದ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರವೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲೂ 5 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿತ್ತು.