ಚಿಕ್ಕಮಗಳೂರಲ್ಲಿ ವರುಣನ ಅಬ್ಬರ ಜೋರು: ತುಂಬಿ ಹರಿದ ಹೆಬ್ಬಾಳೆ ಸೇತುವೆ
ಚಿಕ್ಕಮಗಳೂರು, ಆಗಸ್ಟ್ 05: ಮಲೆನಾಡು ಭಾಗದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಿನ್ನೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಧಿಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಗಾಳಿ ಸಹಿತ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕೆಲವೆಡೆ ಗಾಳಿ ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಜೊತೆಗೆ ಕಳೆದ ವರ್ಷ ಇದೇ ತಿಂಗಳಿನಲ್ಲಿ ಸಂಭವಿಸಿದ್ದ ಪ್ರವಾಹದ ನೆನಪನ್ನೂ ಈ ಮಳೆ ಮರುಕಳಿಸುವಂತೆ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗ್ರಾಮಗಳಾದ ಹ್ಯಾಂಡ್ ಪೋಸ್ಟ್, ಮುತ್ತಿಗೆಪುರ, ಅಣಜೂರು ಸೇರಿದಂತೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.

ಬಿರುಗಾಳಿ ಸಹಿತ ಮಳೆಯಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕಳೆದ ರಾತ್ರಿ ಹೆಬ್ಬಾಳ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಸೇತುವೆ ಮೇಲೆ ಬಿದ್ದ ಮರದ ದಿಣ್ಣೆಗಳು ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿವೆ.
ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹೆಬ್ಬಾಳೆ ಸೇತುವೆಗೆ ಭದ್ರಾ ನದಿ ನೀರು ಅಪ್ಪಳಿಸುತ್ತಿದ್ದು, ಮುಳುಗಡೆಯಾಗಲು ಒಂದು ಅಡಿಯಷ್ಟೆ ಬಾಕಿ ಇದೆ. ಸೇತುವೆ ಮಳುಗಡೆಯಾದರೆ ಹೊರನಾಡು-ಕಳಸ ಸಂಪರ್ಕ ಕಡಿತಗೊಳ್ಳಲಿದೆ.












Click it and Unblock the Notifications