ಭಾರೀ ಮಳೆ: ಹೊರನಾಡು ದೇವಾಲಯದ ಭಕ್ತರ ಗಮನಕ್ಕೆ
ಚಿಕ್ಕಮಗಳೂರು, ಜುಲೈ 04: ಮಲೆನಾಡು, ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ಮಳೆ ಆರ್ಭಟಿಸುತ್ತಿದೆ. ವಾರಾಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸ ಕೈಗೊಳ್ಳುವ ಜನರಿಗೆ ಪ್ರಮುಖ ಮಾಹಿತಿಯೊಂದಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಅಬ್ಬಿರಿಸಲಿದ್ದು, ಜನರು ಎಚ್ಚರಿಕೆಯಿಂದ ಪ್ರವಾಸ ಕೈಗೊಳ್ಳಬೇಕು.
ಚಿಕ್ಕಮಗಳೂರಿನ ಪಶ್ಚಿಮಘಟ್ಟದ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿದೆ. ಇದರಿಂದಾಗಿ ಭದ್ರಾ ನದಿಗೆ ಅಡ್ಡಲಾಗಿ ಕಳಸ ತಾಲೂಕಿನ ಹೆಬ್ಬಾಳೆಯಲ್ಲಿ ನಿರ್ಮಿಸಿರುವ ಸೇತುವೆ ಮುಳುಗಡೆಗೆ ಹಂತಕ್ಕೆ ತಲುಪಿದೆ.

ಹೆಬ್ಬಾಳೆ ಸೇತುವೆ ಮೇಲೆ ನೀರು ಹರಿಯಲು ಕೆಲವೇ ಅಡಿ ಬಾಕಿ ಇದೆ. ಭದ್ರಾ ನದಿ ನೀರಿನಿಂದ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ.
ಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆ ಹಾಕಲಾಗಿದ್ದು, ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬ್ಯಾರಿಕೇಡ್ ದಾಟಿ ಬಂದ ಜನರು ಪೊಲೀಸರ ಜೊತೆ ವಾಕ್ಸಮರ ನಡೆಸುತ್ತಿದ್ದಾರೆ.
ಯಾವುದೇ ಕ್ಷಣದಲ್ಲಿ ಸೇತುವೆ ಮೇಲೆ ಭದ್ರಾ ನದಿ ನೀರು ಉಕ್ಕುವ ಸಾಧ್ಯತೆ ಇದೆ. ಆದ್ದರಿಂದ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ವಾರಾಂತ್ಯದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೋಗುವ ನೂರಾರು ಭಕ್ತರು ಇದೇ ಮಾರ್ಗದಲ್ಲಿ ಆಗಮಿಸುತ್ತಾರೆ. ಆದ್ದರಿಂದ ಎಚ್ಚರ ವಹಿಸಲಾಗಿದೆ.
ಹೆಬ್ಬಾಳೆಯಲ್ಲಿ ನಿರ್ಮಿಸಿರುವ ಸೇತುವೆ ಮುಳುಗು ಸೇತುವೆ ಎಂದೇ ಖ್ಯಾತಿ ಪಡೆದಿದೆ. ಪ್ರತಿ ವರ್ಷ ಮಳೆಗಾಲದಲ್ಲಿಯೂ ಸೇತುವೆ ಮುಳುಗಡೆಯಾಗುತ್ತದೆ. ಆಗ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತದೆ. ಜೂನ್ ತಿಂಗಳಿನಲ್ಲಿ ಹೆಚ್ಚು ಮಳೆಯಾಗುವ ಕಾರಣ ಭದ್ರಾ ನದಿ ತುಂಬಿ ಸೇತುವೆ ಮುಳುಗಡೆಯಾಗುತ್ತದೆ.
ಈ ಸೇತುವೆ ಶಿಥಿಲಗೊಂಡಿದೆ. ಆದ್ದರಿಂದ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಈಗ ಹಳೆಯ ಸೇತುವೆ ಮೇಲೆ ಈಗ ಭದ್ರಾ ನದಿ ಹರಿಯಲು ಆರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಪ್ರವಾಸಿಗರ ದಂಡು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಜಲಪಾತಗಳು ಉಕ್ಕಿ ಹರಿಯುತ್ತಿವೆ. ಪ್ರಕೃತಿ ಸೌಂದರ್ಯ ಇಮ್ಮಡಿಯಾಗಿದ್ದು, ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
ಮಳೆ ಹಿನ್ನಲೆಯಲ್ಲಿ ಸಿರಿಮನೆ ಜಲಪಾತಕ್ಕೆ ಜೀವಕಳೆ ಬಂದಿದೆ. ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿರುವ ಸಿರಿಮನೆ ಫಾಲ್ಸ್ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದಲ್ಲಿ ಸಿರಿಮನೆ ಜಲಪಾತವಿದೆ.
ಜಲಪಾತದ ಸೌಂದರ್ಯ ಕಣ್ತುಂಬಿಕೊಳ್ಳಲು, ಜಲಪಾತದ ನೀರಿನಲ್ಲಿ ಆಟವಾಡಲು ರಾಜ್ಯ, ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಹೋಟೆಲ್, ಲಾಡ್ಜ್, ಹೋಂ ಸ್ಟೇಗಳು ಭರ್ತಿಯಾಗಿವೆ.
ಮಳೆಯ ಅಬ್ಬರಕ್ಕೆ ಶೃಂಗೇರಿಯಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಭಾರೀ ಪ್ರಮಾಣದಲ್ಲಿ ನೀರು ನದಿಗೆ ಹರಿದು ಬರುತ್ತಿದೆ. ಆದ್ದರಿಂದ ಶೃಂಗೇರಿ ಪಟ್ಟಣದಲ್ಲಿ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ.












Click it and Unblock the Notifications