ಜನರ ನಿರೀಕ್ಷೆಗಳನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಮೇ, 18: ಕ್ಷೇತ್ರದ ಜನತೆ 20 ವರ್ಷಗಳ ದುರಾಡಳಿತಕ್ಕೆ ಬೇಸತ್ತು ಬದಲಾವಣೆ ಬೇಕೆಂದು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲಾಗುವುದು ಎಂದು ಕ್ಷೇತ್ರದ ನೂತನ ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ. ಇದನ್ನು ಗಲನಿಸಿದರೆ ತೆಲುಗುನ ಬಾಹುಬಲಿ ಚಿತ್ರದಲ್ಲಿನ ನಾ ಮಾತೆ ಶಾಸನಂ ಎನ್ನುವ ಡೈಲಾಗ್ ಹೇಳಿದಂತಿದೆ.
ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ಕ್ಷೇತ್ರದ ಜನತೆ 20 ವರ್ಷಗಳ ದುರಾಡಳಿತಕ್ಕೆ ಬೇಸತ್ತು ಬದಲಾವಣೆ ಬೇಕೆಂದು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲಾಗುವುದು. ಅಭಿವೃದ್ಧಿಗಾಗಿ ಜನ ಬದಲಾವಣೆ ಬಯಸಿರುವುದರಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ನಾನಾಗಲೀ, ನನ್ನ ಕುಟುಂಬದವರಾಗಲೀ ಗುತ್ತಿಗೆ ಕೆಲಸವನ್ನು ಮಾಡುವುದಿಲ್ಲ. ಗುಣಮಟ್ಟದ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರನಿಗೆ ಮಾತ್ರ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ನೀಡಲಾಗುವುದು. ಕಳಪೆ ಕೆಲಸ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ಗುತ್ತಿಗೆ ವಿಚಾರದಲ್ಲಿ ಚಿಕ್ಕಮಗಳೂರಿನಲ್ಲಿ ಮಾನೋಪಲಿ ವ್ಯವಸ್ಥೆ ನಿರ್ಮಾಣವಾಗಿದ್ದು, ಇದಕ್ಕೆ ಇತಿಶ್ರೀ ಹಾಡಲಾಗುವುದು. ಅಲ್ಲದೆ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗಿದ್ದು, ಅದನ್ನು ಮರುಸ್ಥಾಪಿಸಲಾಗುವುದು ಎಂದರು.
ಚಿಕ್ಕಮಗಳೂರಿನಲ್ಲಿ ಜನಸ್ನೇಹಿ ಆಡಳಿತ ಇಲ್ಲದಂತಹ ಪರಿಸ್ಥಿತಿ ಇದ್ದು, ಸರ್ಕಾರಿ ಕಚೇರಿಗಳನ್ನು ಜನಸ್ನೇಹಿಯನ್ನಾಗಿಸಲಾಗುವುದು. ವಿವಿಧ ಕೆಲಸದ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಕಚೇರಿಗಳಲ್ಲಿ ಗೌರವದಿಂದ ನಡೆಸಿಕೊಂಡು ಜನರ ಸಮಸ್ಯೆ ಪರಿಹರಿಸುವಂತಹ ವ್ಯವಸ್ಥೆಯನ್ನು ರೂಪಿಸಲಾಗುವುದು. ಈ ಸಂಬಂಧ ಜಿಲ್ಲಾಡಳಿತಕ್ಕೆ ಸೂಚನೆಯನ್ನೂ ನೀಡಲಾಗುವುದು. ಈಗಿನಿಂದಲೇ ಈ ವ್ಯವಸ್ಥೆ ಜಾರಿಯಾಗಲಿದೆ ಎಂದರು.
ಚಿಕ್ಕಮಗಳೂರು ಜಿಲ್ಲೆ ಪಂಚ ನದಿಗಳ ಬೀಡಾಗಿದೆ. ಆದರೂ ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ನೀರಾವರಿ ಯೋಜನೆಗಳ ಅವೈಜ್ಞಾನಿಕ ಜಾರಿಯಿಂದಾಗಿ ರೈತರಿಗೆ ಸೌಲಭ್ಯ ಸಿಗದಂತಾಗಿದೆ. ಈ ಹಿನ್ನೆಲೆ ಅಂತರ್ಜಲ ವೃದ್ಧಿಗೆ ಯೋಜನೆ ರೂಪಿಸಲಾಗುವುದು. ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ವೈಜ್ಞಾನಿಕವಾಗಿ ಜಾರಿ ಮಾಡಲು ಕ್ರಮವಹಿಸಲಾಗುವುದು ಎಂದರು.
ಹಾಗೆಯೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಗ್ರಾಮೀಣ ಭಾಗದಲ್ಲಿ ಸರ್ವಋತು ರಸ್ತೆಗಳ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಎಲ್ಲ ಶಾಸಕರೊಂದಿಗೆ ತೆರಳಿ ಮನವಿ ಮಾಡಲಾಗುವುದು. ರೈತರ ಬೆಳೆಗಳ ಸಂರಕ್ಷಣೆಯ ಉದ್ದೇಶದಿಂದ ರೈತರ ಬೇಡಿಕೆಯಂತೆ ನಗರದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೂ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಕಳಸ ಇನಾಂ ಭೂಮಿ ಸಮಸ್ಯೆ ಹಾಗೂ ಜಿಲ್ಲಾದ್ಯಂತ ಜನರ ನೆಮ್ಮದಿ ಕೆಡಿಸಿರುವ ಡೀಮ್ಡ್ ಅರಣ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸಿಎಂ ಬಳಿ ನಿಯೋಗ ಕರೆದೊಯ್ದು ಅರಣ್ಯಾಧಿಕಾರಿಗಳು, ಕಂದಾಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮಸ್ಯೆಯನ್ನು ಪರಿಹರಿಸಲಾಗುವುದು. ಇನ್ನು ಬಸವನಳ್ಳಿ ಕೆರೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಕೆರೆ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿ ಆಗಬೇಕು.ಅನುದಾನ ದುರ್ಬಳಕೆ ಆದಲ್ಲಿ ಗುತ್ತಿಗೆದಾರರ ವಿರುದ್ಧ ಕ್ರಮವಹಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಮೂರ್ತಿ, ರೇಖಾ ಹುಲಿಯಪ್ಪಗೌಡ, ಪುಟ್ಟೇಗೌಡ, ಎಚ್.ಪಿ.ಮಂಜೇಗೌಡ, ಕೆ.ಮುಹಮ್ಮದ್, ರವೀಶ್, ಶಿವಾನಂದಸ್ವಾಮಿ, ರೂಬೆನ್ಮೋಸೆಸ್, ಬಿ.ಎಚ್.ಹರೀಶ್, ತನೋಜ್ಕುಮಾರ್, ಮಲ್ಲೇಶಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications