ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ: ಸಿ.ಟಿ ರವಿ ಹುನ್ನಾರ ಎಂದ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಮಗಳೂರು, ನವೆಂಬರ್17 : ಮಾಜಿ ಎಮ್ಎಲ್ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳ ತಂಡ ಮನೆಯೊಳಗೆ ದಿಢೀರ್ ಪ್ರವೇಶಿಸಿ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ಐಟಿ ಅಧಿಕಾರಿಗಳ ತಂಡ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿರುವ ಗಾಯತ್ರಿ ಶಾಂತೇಗೌಡ ಒಡೆತನದಲ್ಲಿರುವ ಕ್ರಷರ್ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇಷ್ಟಲ್ಲದೆ ಗಾಯತ್ರಿ ಅವರ ಮನೆಯಲ್ಲಿ ಕೆಲಸ ಮಾಡುವವರ ಮನೆಗಳ ಮೇಲೂ ಐಟಿ ದಾಳಿ ನಡೆದಿದೆ.

ಗಾಯತ್ರಿ ಶಾಂತೇಗೌಡ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾಗಿದ್ದು, ಸಿದ್ದರಾಮಯ್ಯ ಅವರ ಆಪ್ತರೂ ಆಗಿದ್ದಾರೆ. ಮಾಜಿ ಎಮ್ಎಲ್ಸಿಯಾಗಿರುವ ಅವರು ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೇವಲ 6 ಮತಗಳ ಅಂತರದಿಂದ ಬಿಜೆಪಿಯ ಪ್ರಾಣೇಶ್ ಅವರ ವಿರುದ್ಧ ಸೋಲುಕಂಡಿದ್ದರು.
ಈ ಬಾರಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರಿಗೆ ಟಿಕೆಟ್ ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಅವರು ಅಭ್ಯರ್ಥಿಯಾದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಗೆ ಭಾರಿ ಪೈಪೋಟಿ ನೀಡಲಿದ್ದಾರೆ ಎನ್ನುವ ಮಾತುಗಳು ಸಹ ಕೇಳಿಬರುತ್ತಿತ್ತು.
ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕ ಸಿ.ಟಿ.ರವಿ ಅವರ ಹುನ್ನಾರದಿಂದಲೇ ಐಟಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಗುರುವಾರ ಬೆಳಗ್ಗೆ ಐಟಿ ಅಧಿಕಾರಿಗಳ ತಂಡ ಕಾರಿನಲ್ಲಿ ಗಾಯತ್ರಿ ಶಾಂತೇಗೌಡ ಅವರ ಮನೆಯ ಬಳಿ ಬಂದು ಏಕಾಏಕಿ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಕಾರಿಗೆ ಮದುವೆಯ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದಿದೆ. ಯಾರಿಗೂ ಅನುಮಾನ ಬರಬಾರದೆಂದು ಐಟಿ ಅಧಿಕಾರಿಗಳು ತಮ್ಮ ಕಾರಿಗೆ ಮದುವೆ ಬೋರ್ಡ್ ಹಾಕಿಕೊಂಡು ಬಂದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಸಿ.ಟಿ ರವಿ ವಿರುದ್ಧ ಆಕ್ರೋಶ
ಗಾಯತ್ರಿ ಶಾಂತೇಗೌಡ ಅವರ ಮನೆ ಸೇರಿದಂತೆ ಅಳಿಯ ಹಾಗೂ ಸಂಬಂಧಿಕರ ಮನೆಗಳ ಮೇಲೆ ಐಟಿ ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ, ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಐಟಿ ಅಧಿಕಾರಿಗಳು ಹಾಗೂ ಶಾಸಕ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
"ಸಿ.ಟಿ.ರವಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭೀತಿ ಉಂಟಾಗಿದೆ. ಈ ಕಾರಣಕ್ಕೆ ತಮ್ಮ ಎದುರಾಳಿಗಳನ್ನು ನೈತಿಕವಾಗಿ ಕುಗ್ಗಿಸುವ ಉದ್ದೇಶದಿಂದ ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸಲಾಗಿದೆ. ಇಂತಹ ದಾಳಿಗಳಿಗೆ ಕಾಂಗ್ರೆಸ್ ಪಕ್ಷ ಬಗ್ಗಲ್ಲ. ಇದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಸಿ.ಟಿ.ರವಿ ಅವರ ಹುನ್ನಾರಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು. ಮುಂದಿನ ಚುನಾವಣೆಯಲ್ಲಿ ಅವರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications