ವಿವಾದಿತ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್
ಚಿಕ್ಕಮಗಳೂರು, ಜನವರಿ 11: ಶೃಂಗೇರಿಯಲ್ಲಿ ವಿವಾದಗಳ ನಡುವೆ ಆರಂಭವಾಗಿದ್ದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ ಬಿದ್ದಿದೆ. ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮುಂದೂಡಿದೆ. ಪೊಲೀಸರ ಅನುಮತಿ ಇಲ್ಲದ ಕಾರಣ ಇಂದಿನ ಕಾರ್ಯಕ್ರಮವನ್ನು ರದ್ದು ಮಾಡಿ ಮುಂದೂಡಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.
ಸಮ್ಮೇಳನದ ಎರಡನೇ ದಿನದ ಗೋಷ್ಠಿ ಸೇರಿದಂತೆ ಸಮಾರೋಪ ಸಮಾರಂಭವನ್ನು ಮುಂದೂಡಲಾಗಿದೆ.
ನೂರೆಂಟು ವಿಘ್ನಗಳ ನಡುವೆಯೇ ಆರಂಭವಾಯ್ತು ಶೃಂಗೇರಿ ಸಾಹಿತ್ಯ ಸಮ್ಮೇಳನ
ಸಮ್ಮೇಳನಾಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ ಅವರ ವಿರುದ್ಧ ತೀವ್ರ ವಿರೋಧದ ನಡುವೆಯೂ ಶುಕ್ರವಾರ ಸಮ್ಮೇಳನಕ್ಕೆ ಚಾಲನೆ ನೀಡಲಾಗಿತ್ತು. ಅಧ್ಯಕ್ಷರ ಮೆರವಣಿಗೆಯೂ ಇಲ್ಲದೆ ನೇರವಾಗಿ ವೇದಿಕೆ ಕಾರ್ಯಕ್ರಮದ ಮೂಲಕ ಸಮ್ಮೇಳನ ಆರಂಭವಾಗಿತ್ತು. ಆದರೆ ಸಮ್ಮೇಳನ ಆರಂಭವಾದ ನಂತರವೂ ವಿರೋಧಗಳು ಕೇಳಿಬಂದವು. ಕಸಾಪ ಉಳಿಸಿ, ನಕ್ಸಲ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಸಮ್ಮೇಳನದ ಮುಂಭಾಗ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಜೊತೆಗೆ ಅನುಮತಿ ಇಲ್ಲದ ಕಾರಣ ಮಧ್ಯಾಹ್ನದ ಕಾರ್ಯಕ್ರಮವನ್ನು ಮೊಟಕುಗೊಳಿಸುವಂತೆ ಪೊಲೀಸರು ಕಸಾಪಗೆ ಸೂಚಿಸಿದ್ದರು. ಆದರೆ ಕಾರ್ಯಕ್ರಮ ಮುಂದುವರೆದಿತ್ತು. ಜೊತೆಗೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಸಿದ್ದು, ಇಂದಿನ ಕಾರ್ಯಕ್ರಮಕ್ಕೂ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಎರಡನೇ ದಿನ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮುಂದೂಡಲಾಗಿದೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.