ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ಜಿಲ್ಲಾಡಳಿತ ಪ್ಲಾನ್: ಚಿಕ್ಕಮಗಳೂರಿನಲ್ಲಿ 200 ಅಲಂಕೃತ ಮತಗಟ್ಟೆ
ಚಿಕ್ಕಮಗಳೂರು, ಮೇ 1: ನೈತಿಕ ಮತದಾನ ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ, ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಪ್ರತಿಯೊಬ್ಬ ಅರ್ಹ ಮತದಾರರು ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ಎನ್. ರಮೇಶ್ ತಿಳಿಸಿದರು.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಅಂಗವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಧ್ಯೇಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಆಜಾದ್ ಪಾರ್ಕ್ ಹತ್ತಿರದ ಕೆಪಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ನೈತಿಕ ಮತದಾನ ನಡೆಯುವಂತೆ ಇಡೀ ರಾಜ್ಯಾದಾದ್ಯಂತ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗುತ್ತಿದ್ದು, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಮತಗಟ್ಟೆಗಳ ಬಗ್ಗೆ ಕೆಲವರಿಗೆ ಮಾಹಿತಿ ಇರುವುದಿಲ್ಲ. ಹಾಗಾಗಿ ಚುನಾವಣಾ ಆಯೋಗ ಮತಗಟ್ಟೆಗಳ ಪರಿಚಯ ಆಗಬೇಕೆಂಬ ದೃಷ್ಟಿಯಿಂದ ಜಾಗೃತಿ ಮೂಡಿಸಲು ಮತ್ತು ಮತದಾನ ಪ್ರಮಾಣ ಹೆಚ್ಚು ಮಾಡುವ ದೃಷ್ಠಿಯಿಂದ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಜಿಲ್ಲೆಯ 1,222 ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆಯಲ್ಲದೆ, 200 ಮತಗಟ್ಟೆಗಳನ್ನು ಸುಂದರವಾಗಿ ಅಲಂಕಾರ ಮಾಡುವ ಮೂಲಕ ವಿವಿಧ ರೀತಿಯಲ್ಲಿ ಶೃಂಗರಿಸಲಾಗಿದೆ. ಪ್ರತಿಯೊಬ್ಬ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳನ್ನು ಪರೀಕ್ಷಿಸಬಹುದಾಗಿದೆ ಮತ್ತು ನೀವೇ ಚುನಾವಣಾ ರಾಯಭಾರಿಯಾಗಿ ತಮ್ಮ ಅಕ್ಕಪಕ್ಕದ ಮತದಾರರಿಗೆ ಮತದಾನದ ಮಹತ್ವವನ್ನು ತಿಳಿಸಿ ಮತದಾನ ಮಾಡಲು ಪ್ರೇರೆಪಿಸಬೇಕೆಂದು ಹೇಳಿದರು.

ಭಾರತ ಚುನಾವಣಾ ಆಯೋಗ ಶೇ.90ಕ್ಕೂ ಹೆಚ್ಚು ಈ ಬಾರಿ ಮತದಾನವಾಗಬೇಕೆಂಬ ಗುರಿ ಹೊಂದಿದ್ದು, ನಗರ ಪ್ರದೇಶಗಳಲ್ಲಿ ಶೇಕಡವಾರು ಮತದಾನದ ಪ್ರಮಾಣವನ್ನು ಹೆಚ್ಚು ಮಾಡುವ ನಿರೀಕ್ಷೆ ಹೊಂದಲಾಗಿದೆ. ಯುವ ಮತದಾರರು ಸೇರಿದಂತೆ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದ ಅವರು ಹಿರಿಯ ನಾಗರೀಕರಿಗೆ ಏ. 29ರಿಂದ ಮನೆ ಮನೆಗೆ ತೆರಳಿ ಮತದಾನ ಮಾಡಿಸಲಾಗುತ್ತಿದೆ. ಮೂಡಿಗೆರೆ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಹಿರಿಯ ನಾಗರೀಕರಿಂದ ಮತದಾನ ಮಾಡಿಸಲಾಗಿದೆ. ಜಿಲ್ಲೆಯಲ್ಲಿ 2000ಕ್ಕೂ ಹೆಚ್ಚು ಹಿರಿಯ, ಅಂಗವಿಕಲ ಮತದಾರರು ಮನೆಯಲ್ಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಮೇ. 2 ರಂದು ಅಷ್ಟು ಮತದಾರರ ಮನೆಗಳಿಗೆ ತೆರಳಿ ಮತದಾನ ಮಾಡಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿ. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ ಮತದಾರರಲ್ಲಿ ಮತದಾನದ ಕುರಿತು ಕಳೆದ 10 ತಿಂಗಳಿಂದ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವಸಂಸ್ಥೆಯಡಿ 195 ದೇಶಗಳು ಸದಸ್ಯತ್ವ ಪಡೆದಿದ್ದು, ಇವುಗಳ ಪೈಕಿ 90 ದೇಶಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಆಳವಡಿಸಿಕೊಂಡಿದೆ. ಈ ದೇಶಗಳ ಪೈಕಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿದೆ. ಈ ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಪ್ರತಿಯೊಬ್ಬ ಅರ್ಹ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭಿತಿಯಿಂದ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಿ ಉತ್ತಮರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.












Click it and Unblock the Notifications