ಶೃಂಗೇರಿ 100 ಹಾಸಿಗೆ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ನಿರ್ಧಾರ: ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು, ನವೆಂಬರ್ 27: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಲು ಸರ್ಕಾರ ತೀರ್ಮಾನಿಸಿದ್ದು, ಸ್ಥಳವನ್ನು ನಿರ್ಧರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಯ ಪರಿಹಾರ ಮತ್ತು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಸ್ತಾಪಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್. ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು.

ಕಾಫಿ ಬೆಳೆಗಾರರ ಒತ್ತುವರಿ ಸಮಸ್ಯೆಗೆ ಪರಿಹಾರ:
ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ ಬಗ್ಗೆ ಸಮಸ್ಯೆ ಇದೆ. ಕಾಫಿ ಬೆಳೆಗಾರರ ಸಮಸ್ಯೆಗಳನ್ನು ನಿವಾರಿಸಲು ಕಂದಾಯ ಇಲಾಖೆಯವರು ಶೀಘ್ರ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಂದಿದೆ. ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ. ಈ ಭಾಗದ ಪ್ರವಾಹ ಬಂದು ಹಾಳಾಗಿರುವ ರಸ್ತೆಗಳ ದುರಸ್ತಿಗೆ 5.80 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 5 ಕೋಟಿ ರೂ. ಹೆಚ್ಚಿನ ಅನುದಾನವನ್ನು ಬಿಡುಗಡೆ ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿದೆ ಎಂದರು.

ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಾಣ:
ದತ್ತ ಪೀಠ ಈ ಭಾಗದ ಭಾವನೆಗಳ ದೇವಸ್ಥಾನವಾಗಿದೆ. ಈ ದೇವಸ್ಥಾನದಲ್ಲಿ ಮೂಲ ಪೂಜೆ ನಡೆಸುವ ಬಗ್ಗೆ ಶಾಸಕ ಸಿಟಿ ರವಿ ಸುದೀರ್ಘ ಹೋರಾಟ ನಡೆಸಿದ್ದಾರೆ. ಈಗಾಗಲೇ ಕಾನೂನಾತ್ಮಕ ಹೊರಾಟ ನಡೆದಿದ್ದು, ಸೂಕ್ತ ಪರಿಹಾರ ದೊರೆಯಲಿದೆ. ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಿಸಲು ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು.
ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಆನೆ ದಾಳಿಯಿಂದ ಜೀವ ಹಾನಿಯಾದರೆ 15 ಲಕ್ಷ ಪರಿಹಾರ ನೀಡಲಾಗುತ್ತಿದೆ. ಆನೆ ದಾಳಿಯನ್ನು ತಡೆಯಲು ಪ್ರತಿ ಜಿಲ್ಲೆಗೆ ಸ್ಕ್ವಾಡ್ ರಚಿಸಲಾಗಿದೆ ಎಂದರು.












Click it and Unblock the Notifications