ನರೇಗಾ ಯೋಜನೆಯಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಪ್ರಥಮ ಸ್ಥಾನ
ಚಿಕ್ಕಮಗಳೂರು, ಆಗಸ್ಟ್ 24: "ನರೇಗಾ ಯೋಜನೆ ಪ್ರಗತಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ," ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಚಿಕ್ಕಮಗಳೂರು ನಗರದ ಆದಿಚುಂಚನಗಿರಿ ತಾಂತ್ರಿಕ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
"ಆ.10 ರಂದು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ," ಎಂದು ಸಚಿವ ಈಶ್ವರಪ್ಪ ಹೇಳಿದರು.

"ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸದ ಬಗ್ಗೆ ದೂರುಗಳು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿ, ಪಂಚಾಯತಿಯಲ್ಲಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಇರಬೇಕು. ಅಧ್ಯಕ್ಷರಿಗೆ ಸಹಕಾರ ನೀಡುವ ಮೂಲಕ ಪಂಚಾಯತಿಯನ್ನು ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯಲು ಮುಂದಾಗಬೇಕೆಂದು ಸೂಚಿಸಿದ ಸಚಿವರು, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪಂಚಾಯಿತಿ ಸದಸ್ಯರುಗಳಿಗೂ ಕಾರ್ಯಾಗಾರವನ್ನು ನಡೆಸಲಾಗುವುದು," ಎಂದರು.
"ಪ್ರತಿ ಪಂಚಾಯತಿಯಲ್ಲಿ ಸೋಲಾರ್ ದೀಪವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. 13ನೇ ಹಣಕಾಸು, ಶಾಸಕರು ಮತ್ತು ಸಂಸದರ ನಿಧಿಯನ್ನು ಬಳಸಿಕೊಳ್ಳಬೇಕೆಂದು ಸಲಹೆ ನೀಡಿ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಳೆ ನೀರು ಇಂಗಿಸುವ ಕೆಲಸಕ್ಕೆ ಮುಂದಾಗಬೇಕು. ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು," ತಿಳಿಸಿದರು.

"ಶೌಚಾಲಯ ನಿರ್ಮಾಣಕ್ಕೆ ಒತ್ತು ಕೊಡಬೇಕು. ಘನತ್ಯಾಜ್ಯ ವಿಲೇವಾರಿಗೆ ಜಾಗ ಗುರುತಿಸಿ ಪಂಚಾಯತಿಗೆ ಹಸ್ತಾಂತರಿಸಲು ಜಿಲ್ಲಾಧಿಕಾರಿಗಳು ಗಮನ ಹರಿಸಬೇಕು. ಪಂಚಾಯತಿಯನ್ನು ತಮ್ಮ ಕುಟುಂಬವೆಂದು ಭಾವಿಸಿ ಅದರ ಅಭಿವೃದ್ಧಿಗೆ ಚುನಾಯಿತ ಸದಸ್ಯರು ಮುಂದಾಗಬೇಕಿದೆ," ಎಂದು ಸಲಹೆ ನೀಡಿದರು.
"ಸಂಸದ, ಶಾಸಕ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು. ಆದರೆ, ಪಂಚಾಯತಿ ಮಟ್ಟದಲ್ಲಿ ಗೆಲುವು ಸಾಧಿಸುವುದು ಕಷ್ಟಕರ. ನಿಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದವರ ನಿರೀಕ್ಷೆಯನ್ನು ಹುಸಿಗೊಳಿಸಬಾರದು," ಎಂದು ಕಿವಿಮಾತು ಹೇಳಿದರು.

ಹೆಜ್ಜೆಗುರುತು ಮೂಡಿಸಿ
"ಗ್ರಾಮ ಪಂಚಾಯಿತಿಯಲ್ಲಿ ಜನರು ನೆನಪಿನಲ್ಲಿಟ್ಟುಕೊಳ್ಳುವಂತಹ ಕೆಲಸಗಳನ್ನು ಮಾಡುವ ಮೂಲಕ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಬೇಕು. ಉಳಿದ ಮೂರು ವರ್ಷದ ಅವಧಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಪಂಚಾಯಿತಿಯನ್ನು ಬಲಗೊಳಿಸಬೇಕೆಂದು," ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
"ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಗಾಂಧೀಜಿ ಕನಸು ನನಸಾಗಿದೆಯೇ ಎಂದು ತಿರುಗಿ ನೋಡಬೇಕಿದೆ. ಇಂದಿಗೂ ಹಲವು ಸಮಸ್ಯೆಗಳು ಬಾಕಿ ಉಳಿದಿವೆ. ದೂರದಿಂದ ಕುಡಿಯುವ ನೀರು ತರುವ ಸ್ಥಿತಿ ಇದೆ. ಪಂಚಾಯಿತಿಗೆ ಬರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಲಜೀವನ ಮಿಷನ್ ಯೋಜನೆಯಡಿ ಕ್ರಾಂತಿಕಾರಕ ಬದಲಾವಣೆಗಳಾಗಬೇಕು. ಕುಡಿಯುವ ನೀರಿಗೆ ಮೊದಲಾದ್ಯತೆ ಕೊಡಬೇಕೆಂದು," ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.












Click it and Unblock the Notifications