ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಒತ್ತಾಯ
ಚಿಕ್ಕಮಗಳೂರು, ಆಗಸ್ಟ್ 4 : ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಈ ಮಧ್ಯೆ ಸಿ.ಟಿ.ರವಿ ವಿರುದ್ಧ ಸ್ಫರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಕಿಸಾನ್ ಕಾಂಗ್ರೆಸ್ ಮನವಿ ಮಾಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಆಗಸ್ಟ್ 3ರಂದು ದಾವಣಗೆರೆ ನಗರದಲ್ಲಿ ಸಿದ್ಧರಾಮಯ್ಯ ಅವರ 75ನೇ ಜನ್ಮದಿನಾಚರಣೆ ಕಾರ್ಯಕ್ರಮ ಸಂದರ್ಭದಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯಾದ್ಯಕ್ಷ ಸಚಿನ್ ಮೀಗಾ ನೇತೃತ್ವದ ತಂಡ ಸಿದ್ಧರಾಮಯ್ಯರನ್ನು ಭೇಟಿಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿ ಸಿದ್ಧರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದರು.
ಸಿದ್ದರಾಮಯ್ಯರ ಜನ್ಮ ರಹಸ್ಯ ಬಯಲಾಗಿದ್ದು ಯಾವಾಗ?
ಕಿಸಾನ್ ಕಾಂಗ್ರೆಸ್ ಮುಖಂಡರು ಮನವಿಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಫರ್ಧಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಸಿ.ಟಿ.ರವಿ ಅವರ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದು, ಈ ಹಿನ್ನಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಫರ್ಧಿಸಬೇಕೆಂದು ಮಾಜಿ ಸಿಎಂಗೆ ಮನವಿ ಮಾಡಿರುವುದಾಗಿ ಮೀಗಾ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಮಾತ್ರ ಬಾಕಿ ಇದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಚಿನ್ ಮೀಗಾ ಮನವಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಇನ್ನು ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ವರುಣ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ತವರಿನ ಕ್ಷೇತ್ರದ ಮತದಾರ ಕೈ ಬಿಟ್ಟರು, ಕೈ ಹಿಡಿದು ಗೆಲ್ಲಿಸಿದ್ದ ಬಾದಾಮಿಯಲ್ಲಿ ಸ್ಪರ್ಧಿಸಲ್ಲ ಎಂದಿದ್ದಾರೆ, ದೂರ ಎಂಬ ಕಾರಣಕ್ಕೆ ಈ ನಿರ್ದಾರ ತೆಗೆದುಕೊಂಡಿದ್ದಾರೆ.
ಮೊದಲು ಚಾಮರಾಜಪೇಟೆ, ನಂತರ ದಾವಣಗೆರೆ ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲಿ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಆಯ್ಕೆ ಯಾವುದಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.