ಮನವಿಗೆ ಸ್ಪಂದಿಸದ ಜನಪ್ರತಿನಿಧಿಗಳು: ಕಾಫಿನಾಡಲ್ಲಿ ವಿಧಾನಸಭೆ ಚುನಾವಣಾ ಬಹಿಷ್ಕಾರ
ಚಿಕ್ಕಮಗಳೂರು, ಡಿಸೆಂಬರ್ 20 : ತಮ್ಮ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿಗಳ ವಿರುದ್ಧ ಬೇಸತ್ತ ಗ್ರಾಮದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದಲ್ಲದೇ ಮುಂದಿನ ವಿಧಾನಸಭೆ ಚುನಾವಣೆಗೆ ಬಹಿಷ್ಕರಿಸಿ ಧರಣಿ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ.
ಜಿಲ್ಲೆಯ ಕೊಪ್ಪ ತಾಲೂಕಿನ ಹಾಡು ಗ್ರಾಮದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ತಮ್ಮ ಗ್ರಾಮದ ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿಯಿಂದ ಹದಗೆಟ್ಟಿದ್ದ ರಸ್ತೆ ಹಾಗೂ ಸೇತುವೆಯ ದುರಸ್ತಿ ಕಾರ್ಯ ಮಾಡಲು, ಶೃಂಗೇರಿ ಕ್ಷೇತ್ರದ ಹಾಲಿ ಶಾಸಕರು ಹಾಗೂ ಆಡಳಿತ ಪಕ್ಷ ಸಂಪೂರ್ಣವಾಗಿ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದ ಈ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭ ತಮ್ಮ ಗ್ರಾಮದಲ್ಲಿ ಸಭೆ, ಸಮಾರಂಭಗಳನ್ನು ನಡೆಸಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದು, 2023ರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹಾಡು ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸೇತುವೆ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಸಿಲುಕಿ ಕುಸಿಯುವ ಹಂತದಲ್ಲಿದೆ. ಈ ಸೇತುವೆ ದುರಸ್ತಿಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸೇತುವೆ ಮತ್ತು ರಸ್ತೆ ಹಾಳಾಗಿರುವುದರಿಂದ ಗ್ರಾಮದ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಇದರಿಂದ ಎರಡೂ ಪಕ್ಷಗಳ ಮುಖಂಡರಿಗೆ ಗ್ರಾಮಸ್ಥರಿಗೆ ಮುಖ ತೋರಿಸದ ಪರಿಸ್ಥಿತಿ ನಿರ್ಮಾಣವಾಗಿದೆ.
ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ನಾವು ಗ್ರಾಮಸ್ಥರ ಕೆಂಗೆಣ್ಣಿಗೆ ತುತ್ತಾಗಿದ್ದೇವೆ. ಈ ಕಾರಣದಿಂದ ನಮ್ಮ ಪಕ್ಷಗಳ ಮುಖಂಡರ ನಡವಳಿಕೆಗೆ ಬೇಸತ್ತು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ನಾವು ಹೊಂದಿದ್ದ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇವೆ. ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ರಸ್ತೆ ಹಾಗೂ ಸೇತುವೆ ದುರಸ್ತಿಗಾಗಿ ಈ ಹಿಂದೆ ಸಂಬಂಧಿಸಿದವರಿಗೆ ಮನವಿ ನೀಡಿದ್ದಲ್ಲದೇ, ಕ್ರಮವಹಿಸದಿದ್ದಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇವೆಂದು ತಿಳಿಸಿದ್ದೆವು. ಆದರೂ ಮುಖಂಡರು ನಮ್ಮ ಮನವಿಗೆ ಸ್ಪಂದಿಸಿಲ್ಲ. ಎಚ್ಚರಿಕೆಗೂ ಸ್ಪಂದಿಸದ ಮುಖಂಡರಿಗೆ ಬುದ್ಧಿ ಕಲಿಸುವ ಉದ್ದೇಶದಿಂದ ಕಾಂಗ್ರೆಸ್, ಬಿಜೆಪಿಯಲ್ಲಿರುವ ಗ್ರಾಮದ ಹಲವಾರು ಮುಖಂಡರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.












Click it and Unblock the Notifications