ಚಾರ್ಮಾಡಿ ಘಾಟ್ನಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಒಪ್ಪಿಗೆ
ಚಿಕ್ಕಮಗಳೂರು, ಮಾರ್ಚ್ 17; ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸರ್ಕಾರಿ ಬಸ್ಗಳ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಒಪ್ಪಿಗೆ ನೀಡಿದೆ. 18 ತಿಂಗಳಿನಿಂದ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು.
ಬುಧವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರಿ ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿದೆ. 6 ಚಕ್ರ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ವರದಿಯನ್ನು ಆಧರಿಸಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. 18 ತಿಂಗಳ ಬಳಿಕ ಘಾಟ್ ರಸ್ತೆಯಲ್ಲಿ ಬಸ್ ಸಂಚಾರ ಆರಂಭವಾಗಲಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಕೊಟ್ಟಿಗೆಹಾರ, ಚಾರ್ಮಾಡಿ ಭಾಗದ ಜನರು ಸರ್ಕಾರವನ್ನು ಒತ್ತಾಯಿಸಿದ್ದರು. ಈ ಆದೇಶದಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.
ಆದೇಶದಲ್ಲಿ ಏನಿದೆ?: ರಾಷ್ಟ್ರೀಯ ಹೆದ್ದಾರಿ 73 (ಹಳೆ ರಾಷ್ಟ್ರೀಯ ಹೆದ್ದಾರಿ 234) ಮಂಗಳೂರು-ತುಮಕೂರು ರಸ್ತೆಯ ಕಿ. ಮೀ. 86.200 (ಚಿಕ್ಕಮಗಳೂರು ಜಿಲ್ಲಾಗಡಿ) ರಿಂದ ಕಿ. ಮೀ. 99.200 (ಕೊಟ್ಟಿಗೆಹಾರ) ರಸ್ತೆಯ ಮಾರ್ಗದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ದಿನದ 24 ಗಂಟೆ ಲಘು ಹಾಗೂ ಕೆಲ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಯಾವ ವಾಹನಗಳು?: ಜನರು ಸಂಚಾರ ನಡೆಸುವ ಕೆಎಸ್ಆರ್ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿ ಚಕ್ರ ವಾಹನಗಳು.
ಯಾವುದಕ್ಕೆ ಅನುಮತಿ ಇಲ್ಲ?: ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನ, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್ಆರ್ಟಿಸಿ ರಾಜಹಂಸ ಬಸ್, ಎಲ್ಲಾ ಬಗೆಯ ಅಧಿಕ ಬಾರದ ಸರಕು ಸಾಗಣೆ ವಾಹನ.












Click it and Unblock the Notifications